ಬೆಂಗಳೂರು: ಬಿರು ಬಿಸಿಲಿನ ಬೇಸಿಗೆ (Summer ) ಮಧ್ಯ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆಯಾಗಿದೆ. ಬೇಸಿಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ತುಸು ನೆಮ್ಮತರಿಸಿದೆ. ಈ ಮಳೆ ಮುಂದಿನ ಮೂರ್ನಾಲ್ಕು ದಿನ ರಾಜ್ಯದ ವಿವಿಧ ಭಾಗಗಳಲ್ಲಿ (Rain )ಸುರಿಯಲಿದೆ ಎಂದು ಹವಾಮಾನ ಇಲಾಖೆ (Weather forecast ) ಮುನ್ಸೂಚನೆ ನೀಡಿದೆ.
ಇಂದಿನಿಂದ (ಮಾರ್ಚ್ 16) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ, ವಿಜಯಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಗೇಯೇ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಾ. 18 ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ವರ್ಷಧಾರೆಯಾಗುವ ನಿರೀಕ್ಷೆಯಿದೆ. ಅಲ್ಲದೆ ಮಾ. 19 ರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕರ್ನಾಟಕದ 8 ಜಿಲ್ಲೆಗಳು ಸೇರಿ ರಾಜ್ಯಾದ್ಯಂತ 9 ಜಿಲ್ಲೆಗಳಲ್ಲಿ ಭಾನುವಾರವೂ ಬೇಸಿಗೆ ಮಳೆ ಸುರಿದಿದೆ.ಹಾವೇರಿ ಜಿಲ್ಲೆಯ ಬ್ಯಾಡಗಿ, ರಟ್ಟಿಹಳ್ಳಿ, ಹಿರೇಕೆರೂರ, ರಾಣಿಬೆನ್ನೂರ ತಾಲೂಕಿನ ವಿವಿಧೆಡೆ ಸಂಜೆ ವೇಳೆಗೆ ಆಲಿಕಲ್ಲು ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮುಂಡಗೋಡ, ಯಲ್ಲಾಪುರ, ಬೆಳಗಾವಿ ನಗರ, ಧಾರವಾಡ ಜಿಲ್ಲೆಯ ಅಳ್ನಾವರ, ಚಿಕ್ಕಮಗಳೂರು ಜಿಲ್ಲೆ ವಿವಿಧ ಪ್ರದೇಶ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಾವಣಗೆರೆ ಜಿಲ್ಲೆ ಹೊನ್ನಾಳಿ, ಚನ್ನಗಿರಿ ತಾಲೂಕಿನ ಅಲ್ಲಲ್ಲಿ ಮಳೆಯಾಗಿದೆ.
ಬೀದರ್ ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಜೆ, ಮುಕ್ಕೂರು, ಕಡಬ, ಬಳ್ಪ, ಕೊಕ್ಕಡ ಸಹಿತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ. ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಗಾಳಿ-ಮಳೆಯಾಗಿದೆ.
ಒಂದೆಡೆ ಮಳೆಯ ಮುನ್ಸೂಚನೆ ಇದ್ದರೂ, ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು ಕಲಬುರಗಿಯಲ್ಲಿ ಗರಿಷ್ಠ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.



