ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಶಾಂತಿಯುತ ಹಾಗೂ ಮುಕ್ತವಾಗಿ ನಡೆಸುವ ಉದ್ದೇಶದಿಂದ ಮತಗಟ್ಟೆಗಳ ಸುತ್ತಲಿನ 200 ಮೀ. ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 7ರ ಸಂಜೆ 6ಗಂಟೆಯಿಂದ ಏಪ್ರಿಲ್ 9ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತದಾನಕ್ಕೆ ಬರುವಮತದಾರರನ್ನು ಹೊರತುಪಡಿಸಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು
ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳು ಮೆರವಣಿಗೆ, ಸಾರ್ವಜನಿಕ ಸಭೆ ಅಥವಾ ಪ್ರತಿಭಟನೆಗಳನ್ನು ನಡೆಸುವಂತಿಲ್ಲ. ಪ್ರಚೋದನಾಕಾರಿ ಭಾಷಣ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವ ಕೃತ್ಯಗಳನ್ನು ನಿಷೇಧಿಸಲಾಗಿದೆ.
ಸ್ಫೋಟಕ ವಸ್ತು, ಶಸ್ತ್ರ, ಬಂದೂಕು, ದೊಣ್ಣೆ, ಕತ್ತಿ ಅಥವಾ ಮಾರಕಾಸ್ತ್ರಗಳನ್ನು ಸಾಗಿಸುವುದು ಅಥವಾ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ 200 ಮೀ. ಪರಿಮಿತಿಯಲ್ಲಿ ಯಾವುದೇ ಪೋಸ್ಟರ್, ಬ್ಯಾನರ್ ಹಾಕಬಾರದು. ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬಾರದು. ಮತಗಟ್ಟೆಯ ಒಳಗಡೆ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ.
ಕ್ಷೇತ್ರದ ಮತದಾರರಲ್ಲದ ವ್ಯಕ್ತಿಗಳು ಕಲ್ಯಾಣ ಮಂಟಪ, ಹೋಟೆಲ್ ಅಥವಾ ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರೆ ಅವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ
ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ
ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿ.ಎಂ.ಗಂಗಾಧರಸ್ವಾಮಿ ಎಚ್ಚರಿಸಿದ್ದಾರೆ.



