ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯವು ಮೇ 4 ರಂದು ನಗರದ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 4 ರ ಬೆಳಿಗ್ಗೆ 6 ಗಂಟೆಯಿಂದ ಮೇ 6 ರ ಬೆಳಿಗ್ಗೆ 6 ಗಂಟೆಯವರೆಗೆ ದಾವಣಗೆರೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ನಗರದಾದ್ಯಂತ ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆ, ರ್ಯಾಲಿ, ಜಾಥಾ ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡುವುದು ಹಾಗೂ ಪಟಾಕಿ ಸಿಡಿಸುವುದಕ್ಕೆ ಅವಕಾಶವಿರುವುದಿಲ್ಲ. ಅಕ್ರಮವಾಗಿ ಗುಂಪು ಸೇರುವುದು ಹಾಗೂ ಘೋಷಣೆಗಳನ್ನು ಕೂಗುವುದನ್ನು ನಿರ್ಬಂಧಿಸಲಾಗಿದೆ.
ಮತ ಎಣಿಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದ. ಬೆಳಿಗ್ಗೆ 8ಗಂಟೆಗೆ ಅಂಚೆ ಮತ ಎಣಿಕೆ ಆರಂಭವಾಗಲಿದ್ದು, 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಒಟ್ಟು 14 ಟೇಬಲ್ಗಳನ್ನು ಇರಿಸಲಾಗಿದೆ.ಮತ ಎಣಿಕೆಗಾಗಿ ಕೌಂಟಿಂಗ್ ಸೂಪರ್ವೈಸರ್ಗಳು, ಅಸಿಸ್ಟೆಂಟ್ಗಳು ಮತ್ತು ಮೈಕ್ರೋ ಅಬ್ಸರ್ವರ್ಗಳನ್ನು ನೇಮಿಸಿದೆ.
ಕೇಂದ್ರದ ಸುತ್ತಲೂ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಆರ್ಒ ಅನುಮತಿಯಿಲ್ಲದೆ ಭದ್ರತಾ ಸಿಬ್ಬಂದಿಯೂ ಸೇರಿ ಯಾರೂ ಎಣಿಕೆ ಕೊಠಡಿಯೊಳಗೆ ಪ್ರವೇಶಿಸುವಂತಿಲ್ಲ. ಅಧಿಕೃತ ಪಾಸ್ ಇಲ್ಲದ ಯಾರಿಗೂ ಪ್ರವೇಶ ಇರುವುದಿಲ್ಲ .
ಮೊದಲ ಹಂತದಲ್ಲಿ, ಮತ ಎಣಿಕೆ ಕೊಠಡಿಯ ಒಳಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಮತಯಂತ್ರಗಳ ವಿಡಿಯೊಗ್ರಫಿ ಮತ್ತು ಸಿ.ಸಿ.ಟಿ.ವಿ ಕಣ್ಗಾವಲು ಇರುತ್ತದೆ. ಎರಡನೇ ಹಂತದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಭದ್ರತೆ ಒದಗಿಸುತ್ತದೆ. ಇಲ್ಲಿ ಮೆಟಲ್ ಡಿಟೆಕ್ಟರ್ಗಳ ಮೂಲಕ ತಪಾಸಣೆ ನಡೆಸಲಾಗುತ್ತದೆ. ಮೂರನೇ ಹಂತದಲ್ಲಿ ಕೇಂದ್ರದ ಹೊರಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ವಿವರಿಸಿದರು.
25ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು, ಪ್ರತಿ ಟೇಬಲ್ಗೆ ಒಬ್ಬರಂತೆ ಅಭ್ಯರ್ಥಿಗಳು ತಮ್ಮ ಏಜೆಂಟರನ್ನು ನೇಮಿಸಿಕೊಳ್ಳಲು ಅವಕಾಶವಿದೆ. ಈಗಾಗಲೇ ಕೆಲ ಅಭ್ಯರ್ಥಿಗಳು ತಮ್ಮ ಏಜೆಂಟರ ಪಾಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 30ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವಿದೆ. ಹೊರಭಾಗದಲ್ಲಿ ಧ್ವನಿವರ್ಧಕಗಳ ಮೂಲಕ ಪ್ರತಿ ಸುತ್ತಿನ ಮತ ಎಣಿಕೆಯ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವ ವ್ಯವಸ್ಥೆ ಇರುತ್ತದೆ.



