ದಾವಣಗೆರೆ: ಭದ್ರಾ ಏತ ನೀರಾವರಿ ಯೋಜನೆಯ ಕಾಲುವೆಯ ಕೊನೆಯ ಭಾಗದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ನೀಡಿ ರೈತರ ಅಹವಾಲು ಸ್ವೀಕರಿಸಿದರು.
ಹರಿಹರ ತಾಲ್ಲೂಕಿನ ಭಾನುವಳ್ಳಿ, ನಂದಿತಾವರೆ, ಕಮಲಾಪುರ, ಕಡರನಾಯಕನಹಳ್ಳಿ ಹಾಗೂ ಹೊಳೆಸಿರಿಗೆರೆ ಗ್ರಾಮಗಳ ವ್ಯಾಪ್ತಿಯಲ್ಲಿನ ಭತ್ತದ ಗದ್ದೆಗಳಿಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.
ಅವರು ಇಂದು ಭದ್ರಾ ಕಾಲುವೇಯ ಕೊನೆಯ ಭಾಗದ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ನೀರಿನ ಹಂಚಿಕೆ ಹಾಗೂ ಕಾಲುವೆ ನಿರ್ವಹಣೆಯ ಕುರಿತು ಅಹವಾಲುಗಳನ್ನು ಆಲಿಸಿದರು.
ಕಾಲುವೆಯ ಕೊನೆಯ ತುದಿಯವರೆಗೂ ನೀರು ಸರಾಗವಾಗಿ ಹರಿಯುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಈ ಭಾಗದ ರೈತರು ಎದುರಿಸುತ್ತಿರುವ ನೀರಿನ ಅಭಾವದ ಕುರಿತು ವಾಸ್ತವಿಕ ಸ್ಥಿತಿಯನ್ನು ಅವಲೋಕಿಸಿದರು. ಭತ್ತದ ಬೆಳೆ ಸಮೃದ್ಧವಾಗಿ ಬೆಳೆಯಲು ಕಾಲುವೆಯಲ್ಲಿ ನಿಗದಿತ ಪ್ರಮಾಣದ ನೀರು ಹರಿಯುವುದು ಅವಶ್ಯಕವಾಗಿದ್ದು, ಆಯಾ ಭಾಗದ ರೈತರಿಗೆ ತೊಂದರೆಯಾಗದಂತೆ ನೀರು ನಿರ್ವಹಣೆ ಮಾಡುವಂತೆ ರೈತರು ಮನವಿ ಮಾಡಿದರು.
ಸ್ಥಳದಲ್ಲಿದ್ದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕಾಲುವೆಯ ಕೊನೆಯ ಭಾಗದ ರೈತರಿಗೂ ನ್ಯಾಯಯುತವಾಗಿ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಡೆತಡೆಗಳಿದ್ದಲ್ಲಿ ತಕ್ಷಣವೇ ಸರಿಪಡಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೀರಾವರಿ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.



