ದಾವಣಗೆರೆ: ಕುಡಿಯುವ ನೀರು, ಮೂಲಭೂತ ಸೌಲಭ್ಯಕ್ಕೆ ಒತ್ತು ; ಸರ್ಕಾರದಿಂದ 1 ಸಾವಿರ ಮನೆ ಮಂಜೂರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಮಲ್ಲಿಕಾರ್ಜುನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಕಚೇರಿ ಅಮೃತ ಮಹೋತ್ಸವ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಮತ್ತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ, ಮುದಹದಡಿ, ಕೈದಾಳೆ, ಕುಕ್ಕೆವಾಡ, ಕುರ್ಕಿ, ಬೆಳಗುರು, ಶಿರಮಗೊಂಡನಹಳ್ಳಿ ಮತ್ತು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ಗ್ರಾಮಗಳಲ್ಲಿ ಕಾಮಗಾರಿಗಳು, ಕುಡಿಯುವ ನೀರು ಸರಬರಾಜು, ರಸ್ತೆ, ಚರಂಡಿ, ಸ್ಮಶಾಣ, ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ‘ಜಲ ಜೀವನ್ ಮಿಷನ್’ (JJM) ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಮನೆಗಳ ಮುಂದೆ ನಳಗಳಿಗೆ ನೀರು ಬರುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಗಮನಹರಿಸಿ, ಹೊಸ ಬೋರ್‌ವೆಲ್‌ಗಳನ್ನು ಕೊರೆಸಲು ಹಾಗೂ ನೀರಿನ ಟ್ಯಾಂಕ್‌ಗಳ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈದಾಳ್ ಕ್ಯಾಂಪ್‌ನಲ್ಲಿ ಸ್ಮಶಾನ ಭೂಮಿಯ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ಹಾಗೂ ಜಾಗ ಗುರುತಿಸಲು ತಹಶೀಲ್ದಾರ್‌ ಅಶ್ವಥ್‌ ಅವರಿಗೆ ಸೂಚನೆ ನೀಡಿದರು.

ನಗರ ಹಾಗೂ ಗ್ರಾಮೀಣ ಭಾಗದ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಮತ್ತು ಬೀದಿ ದೀಪಗಳ ಸಮಸ್ಯೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇಂದು ಖುದ್ದು ಕೆಲವು ವಾರ್ಡ್‌ ಗಳಿಗೆ ಭೇಟಿ ನೀಡಿ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾದಿಕಾರಿ ರಾಮ್‌ ಬೋವಿ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ (NRLM) ಅಡಿಯಲ್ಲಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ಥಳೀಯವಾಗಿ ಮಹಿಳೆಯರೇ ನಡೆಸುವ ‘ಅಕ್ಕ ಕ್ಯಾಫೆ’, ಎಣ್ಣೆ ಗಾಣ, ಹಪ್ಪಳ-ಸಂಡಿಗೆ ತಯಾರಿಕೆ ಮತ್ತು ಪಶುಸಂಗೋಪನೆಯಂತಹ ಸ್ವಯಂ ಉದ್ಯೋಗಗಳಿಗೆ ತರಬೇತಿ ಹಾಗೂ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ (ಬಸವ, ಅಂಬೇಡ್ಕರ್, ದೇವರಾಜ ಅರಸು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ) ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಗಳ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.

1 ಸಾವಿರ ಮನೆ ಮಂಜೂರು

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1000 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಈಗಾಗಲೇ ವಿವಿಧ ಹಂತಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ವಸತಿ ಯೋಜನೆಯಡಿ ಹಣವು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದ್ದು, ಕಾಮಗಾರಿಯ ಹಂತಗಳನ್ನು ಆ್ಯಪ್ ಮೂಲಕ ಜಿಯೋ-ಟ್ಯಾಗ್ ಮಾಡಲಾಗುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಜುಲೈ 1 ರಿಂದ ಪ್ರಾರಂಭವಾಗಲಿರುವ ಹೊಸ ಅಭಿಯಾನದ ಮೂಲಕ ಹೆಚ್ಚಿನ ಜನರಿಗೆ ಕೆಲಸ ನೀಡಲು ಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿಯನ್ನು ನೀಡಿದರು.

ದಾವಣಗೆರೆ ತಹಶೀಲ್ದಾರ್‌ ಅಶ್ವಥ್‌ ಅವರು ಮಾತನಾಡಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ವಿಧವಾವೇತನ, ಆಹಾರ ಸಂರಕ್ಷಣೆ, ಕಂದಾಯ ಗ್ರಾಮ, ವಿಪತ್ತು ನಿರ್ವಹಣೆ, ಭೂ ಮಂಜೂರಾತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಮುಜರಾಯಿ ದೇವಸ್ಥಾನಗಳ ನಿರ್ವಹಣೆ, ಹೊಸ ಕಂದಾಯ ಗ್ರಾಮಗಳನ್ನು ಗುರುತಿಸುವುದು ಸೇರಿದಂತೆ 74 ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ 87 ಲಕ್ಷ ಪುಟಗಳನ್ನು ಡಿಜಿಟಲೀಕರಣ ಮಾಡಿ ದಾವಣಗೆರೆ ತಾಲ್ಲೂಕು ರಾಜ್ಯದಲ್ಲಿಯೇ 3 ನೇ ಸ್ಥಾನವನ್ನು ಪಡೆದಿದೆ, ಇದುವರೆವಿಗೂ 53000 ಪುಟಗಳ ಡಿಜಿಟಲ್ ಮಾದರಿ ದಾಖಲೆಗಳನ್ನು ಸಾರ್ವಜನಿಕರು ಪಡೆದಿರುತ್ತಾರೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತ ಹೊಸ ಗೌಡರ್‌ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು (PDO) ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *