ದಾವಣಗೆರೆ: ರಾಜ್ಯದಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಹಚ್ಚುವಿಕೆ ತಡೆ ಕಾಯ್ದೆ (PCPNDT) ಮತ್ತು ಎಂಟಿಪಿ (MTP) ಕಾಯ್ದೆಗಳ ನಿಯಮಗಳನ್ನು ಉಲ್ಲಂಘಿಸುತ್ತಿರುವ ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ; ರೈಲು ಸಂಚಾರದ ಸಮಯ, ಮಾರ್ಗದಲ್ಲಿ ಬದಲಾವಣೆ
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಹಲವು ಲೋಪದೋಷಗಳು ಬೆಳಕಿಗೆ ಬಂದಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ರೀತ್ಯ ಕ್ರಮವಹಿಸಿ ಕಡತ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದರು.
ಗರ್ಭಿಣಿಯರ ಸ್ಕ್ಯಾನಿಂಗ್ ಸಂದರ್ಭದಲ್ಲಿ ಕಡ್ಡಾಯವಾಗಿ ಭರ್ತಿ ಮಾಡಬೇಕಾದ ‘ಫಾರಂ ಎಫ್’ ದಾಖಲೆಗಳನ್ನು ಹಲವು ಆಸ್ಪತ್ರೆಗಳು ಸರಿಯಾಗಿ ನಿರ್ವಹಿಸುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಅರ್ಧಂಬರ್ಧ ಮಾಹಿತಿ ತುಂಬಲಾಗುತ್ತಿದ್ದು, ಗರ್ಭಧಾರಣೆಯ ವಾರ ಮತ್ತು ನಿಖರ ವಿವರಗಳನ್ನು ನಮೂದಿಸುತ್ತಿಲ್ಲ. ಡೇಟಾ ಎಂಟ್ರಿ ಆಪರೇಟರ್ಗಳ ಕೊರತೆಯನ್ನು ನೆಪವಾಗಿಟ್ಟುಕೊಂಡು ತಪ್ಪು ಮಾಹಿತಿ ದಾಖಲಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ತಪ್ಪು ಮಾಹಿತಿಗೆ ಆಯಾ ರೇಡಿಯಾಲಜಿಸ್ಟ್ ಹಾಗೂ ಆಸ್ಪತ್ರೆಯ ಮುಖ್ಯಸ್ಥರೇ ನೇರ ಹೊಣೆಗಾರರಾಗಲಿದ್ದಾರೆ. ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರ ಸಂಪೂರ್ಣ ವಿವರಗಳನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ಅಪ್ಡೇಟ್ ಮಾಡಬೇಕು, ಇಲ್ಲದಿದ್ದರೆ ಪರವಾನಗಿ ರದ್ದುಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗುರುತಿನ ಚೀಟಿ ಕಡ್ಡಾಯ; ಅನಗತ್ಯ ಸ್ಕ್ಯಾನಿಂಗ್ಗೆ ಬ್ರೇಕ್
ಗರ್ಭಧಾರಣೆಯ ಮೊದಲ ತ್ರೈಮಾಸಿಕದಲ್ಲಿ (ಮುಖ್ಯವಾಗಿ 10 ವಾರಗಳ ಒಳಗೆ) ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಇನ್ನು ಮುಂದೆ ಖಾಸಗಿ ಅಥವಾ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸ್ಕ್ಯಾನಿಂಗ್ ಮಾಡಲು ತಾಯಿ ಕಾರ್ಡ್ (RCH ID) ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗುವುದು. ಸೂಕ್ತ ಗುರುತಿನ ಚೀಟಿ ಇಲ್ಲದೆ ಯಾವುದೇ ಸ್ಕ್ಯಾನಿಂಗ್ ಮಾಡಲು ಅವಕಾಶ ನೀಡಬಾರದು. ಗರ್ಭಾವಸ್ಥೆಯ ಅವಧಿಯಲ್ಲಿ ಸಾಮಾನ್ಯವಾಗಿ ಶಿಫಾರಸು ಮಾಡಲಾಗುವ ಮೂರು ಪ್ರಮುಖ ಸ್ಕ್ಯಾನಿಂಗ್ಗಳನ್ನು (NT ಸ್ಕ್ಯಾನ್, ಅನಾಮಲಿ ಸ್ಕ್ಯಾನ್ ಮತ್ತು ಗ್ರೋತ್ ಸ್ಕ್ಯಾನ್) ಹೊರತುಪಡಿಸಿ, ವೈದ್ಯಕೀಯ ತುರ್ತು ಸಂದರ್ಭಗಳನ್ನು ಬಿಟ್ಟು ಅನಗತ್ಯ ಸ್ಕ್ಯಾನಿಂಗ್ಗಳಿಗೆ ಕಡಿವಾಣ ಹಾಕುವಂತೆ ಉಪವಿಭಾಗಾಧಿಕಾರಿಗಳು ತಿಳಿಸಿದರು.
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆ ಮಾರಾಟ ಮಾಡುವಂತಿಲ್ಲ
“ವೈದ್ಯರ ಅಧಿಕೃತ ಚೀಟಿ (Prescription) ಇಲ್ಲದೆ ಎರಡನೇ ತ್ರೈಮಾಸಿಕದ ಗರ್ಭಪಾತಕ್ಕೆ ಬಳಸಲಾಗುವ ಮಾತ್ರೆಗಳನ್ನು ಔಷಧಿ ಅಂಗಡಿಗಳಲ್ಲಿ ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಮಾತ್ರೆಗಳನ್ನು ಪಡೆದು ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಹೊಣೆಗಾರಿಕೆಯನ್ನು ಪತ್ತೆಹಚ್ಚುವುದು ಕಷ್ಟವಾಗುತ್ತಿದೆ” ಎಂದು ಡಾ.ಷಣ್ಮುಗಪ್ಪ ಅವರು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು, ವೈದ್ಯರ ಅಧಿಕೃತ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆ ಸೇರಿದಂತೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವಂತಹ ಔಷಧಿಗಳನ್ನು ಮಾರಾಟ ಮಾಡದಂತೆ ಎಲ್ಲಾ ಔಷಧಿ ಕೇಂದ್ರಗಳಿಗೆ ಕಟ್ಟುನಿಟ್ಟಿನ ಮಾಹಿತಿ ನೀಡಿ, ಅನುಮಾನ ಬಂದಂತಹ ಔಷಧಿ ಕೇಂದ್ರಗಳನ್ನು ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಲು ಸೂಚಿಸಿದರು.
ಸುಧಾರಿಸಿದ ಲಿಂಗಾನುಪಾತ – ಮಾಹಿತಿ ನೀಡಿದವರಿಗೆ ಬಹುಮಾನ
ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಪ್ರಗತಿ ಕಂಡುಬಂದಿದ್ದು, ಪ್ರಸ್ತುತ ಅನುಪಾತವು 954ಕ್ಕೆ ತಲುಪಿದೆ ಎಂದು ಡಾ.ಷಣ್ಮುಗಪ್ಪ ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ತಡೆಯಲು ತೀವ್ರ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲಾದರೂ ಕಾನೂನುಬಾಹಿರ ಲಿಂಗ ಪತ್ತೆ ಅಥವಾ ಭ್ರೂಣ ಹತ್ಯೆ ನಡೆಯುತ್ತಿರುವುದು ಕಂಡುಬಂದರೆ, ಆ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಅತ್ಯಂತ ಗೌಪ್ಯವಾಗಿಡಲಾಗುವುದು. ಅಷ್ಟೇ ಅಲ್ಲದೆ, ಅಂತಹ ದೂರುದಾರರಿಗೆ ಸೂಕ್ತ ಬಹುಮಾನವನ್ನು ಸಹ ನೀಡಲಾಗುವುದು. ಮಾಹಿತಿ ಲಭ್ಯವಾದ ತಕ್ಷಣವೇ ರಾಜ್ಯ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ದಾಳಿ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇವಲ ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ, ಎಲ್ಲಾ ಖಾಸಗಿ ಕ್ಲಿನಿಕ್ ಮತ್ತು ಸ್ಕ್ಯಾನಿಂಗ್ ಸೆಂಟರ್ಗಳು ಪಿಸಿಪಿಎನ್ಡಿಟಿ ಕಾಯ್ದೆಯಡಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಸ್ಕ್ಯಾನಿಂಗ್ ವರದಿಗಳಲ್ಲಿ ಲಿಂಗ ಪತ್ತೆ ಮಾಡುವುದಿಲ್ಲ ಎಂಬ ಘೋಷಣಾ ಪತ್ರವನ್ನು ನಮೂದಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ತನಿಖೆಯ ವೇಳೆ ನಿಯಮ ಉಲ್ಲಂಘಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಪ್ರಮುಖ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಇಲಾಖೆ ತೀರ್ಮಾನಿಸಿದ್ದು, ಅಂತಹ ಕೇಂದ್ರಗಳಿಗೆ ತಕ್ಷಣವೇ ಶೋಕಾಸ್ (ಕಾರಣ ಕೇಳಿ) ನೋಟಿಸ್ ಜಾರಿಗೊಳಿಸಲು ಉಪವಿಭಾಗಾಧಿಕಾರಿಗಳು ಸಭೆಯಲ್ಲಿ ಆದೇಶಿಸಿದರು.
ಡಾ.ಕಾಳಪ್ಪನವರ್, ಡಾ.ಪ್ರವೀಣ್, ಡಾ.ಸುಮಿತ್ರ ಎಲ್ , ಡಾ. ಮಂಜುನಾಥ್ ಪಾಟೀಲ್ ಮತ್ತು ಡಾ.ಸವಿತಾ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.



