ದಾವಣಗೆರೆ: ಜಿಲ್ಲೆಯ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳು, ಆಸ್ಪತ್ರೆ ಹಾಗೂ ಇನ್ನಿತರೆ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಂತಿರುವ ನೀರು ನಿಲ್ಲದಂತೆ ಸ್ವಚ್ಚಗೊಳಿಸಿರುವ ವರದಿಯನ್ನು ತಪ್ಪದೇ ನೀಡಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ಆಯೋಜಿಸಲಾಗಿದ್ದ ಪಲ್ಸ್ ಪೊಲೀಯೋ, ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಸೊಳ್ಳೆ ಪರದೆಯನ್ನು ಅಳವಡಿಸಬೇಕು. ಬಳಸುವ ನೀರಿಗೆ ಬೇವಿನ ಎಣ್ಣೆಯನ್ನು ಬೇರಿಸಬೇಕು. ಶಾಲಾ ಮಕ್ಕಳಿಗೆ ಒಡಮಸ್ ಹಚ್ಚಿಕೊಂಡು ಬರುವಂತೆ ತಿಳಿಸಬೇಕು. ಗ್ಯಾರೇಜ್ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ ಮಾಡಬೇಕು. ವೈದ್ಯರು ತಮಗೆ ನಿಯೋಜಿತ ಕರ್ತವ್ಯವನ್ನು ಸಾಮಾಜಿಕ ಕಳಕಳಿಯಿಂದ ಮಾಡಬೇಕು ಎಂದರು.
ಸಾಂಕ್ರಾಮಿಕ ರೋಗ ತಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಮಳೆಗಾಲ ಪ್ರಾರಂಭವಾಗಿದ್ದು, ಮಲೇರಿಯಾ ಹರಡುವ ಕಾಲ ಇದಾಗಿದೆ. ಹೀಗಾಗಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ನೀರು ಹರಿದುಹೋಗುವ ಚರಂಡಿಗಳನ್ನು ಶುಚಿಗೊಳಿಸಬೇಕು, ಎಲ್ಲಿಯೂ ನೀರು ಸಂಗ್ರಹವಾಗದಂತೆ ನೋಡಿಕೊಂಡು ಮಲೇರಿಯಾ ಹರಡದಂತೆ ಎಚ್ಚರವಹಿಸಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ; ಸಮರ್ಥ್ ಶಾಮನೂರು
ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ ಹಾಗೂ ರೆಪೆಲೆಂಟ್ಗಳ ಉಪಯೋಗ, ಕಿಟಕಿಗಳಿಗೆ ಜಾಲರಿ ಹಾಕಿದರೆ ಮನೆಯೊಳಗೆ ಸೊಳ್ಳೆ ಬರುವುದನ್ನು ತಡೆಗಟ್ಟಬಹುದು. ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಸೊಳ್ಳೆರಹಿತ ಓವರ್ ಹೆಡ್ ಟ್ಯಾಂಕ್ ಹಾಗೂ ಅಂಡರ್ ಗ್ರೌಂಡ್ ಟ್ಯಾಂಕ್ಗಳನ್ನು ನಿರ್ಮಿಸುವಂತೆ ಅಗತ್ಯವಾದ ನಿಯಮಾವಳಿಗಳನ್ನು ಜಾರಿಗೊಳಿಸಬೇಕು ಮತ್ತು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಬೇಕು. ವಾರಕೊಮ್ಮೆ ಸೊಳ್ಳೆನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಸಿಂಪಡಿಸಬೇಕು. ನಗರ ಪ್ರದೇಶಗಳಲ್ಲಿ ಅನಾಫಿಲಿಸ್ ಸೊಳ್ಳೆಯು ಸಿಮೆಂಟ್ ತೊಟ್ಟಿ, ಸಿಂಟೆಕ್ಸ್, ಡ್ರಂಗಳಲ್ಲಿ ಉತ್ಪತ್ತಿಯಾಗುವುದರಿಂದ ಅವುಗಳನ್ನು ನಿರಂತರವಾಗಿ ಮುಚ್ಚುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು.
ಆರ್.ಸಿ.ಹೆಚ್. ಡಾ.ರೇಣುಕಾರಾಧ್ಯ ಮಾತನಾಡಿ ಜಿಲ್ಲೆಯಲ್ಲಿ ಜೂನ್ 28 ರಂದು ಪಲ್ಸ್ ಪೊಲೀಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಲಸಿಕಾ ದಿನ ಅಂಗನವಾಡಿ ಕೇಂದ್ರವನ್ನು ತೆರೆದಿಡಲು ಸೂಚಿಸುವುದು ಮತ್ತು ಮಕ್ಕಳಿಗೆ ಲಸಿಕೆ ಹಾಕಬೇಕು.
ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೋಳ್ಳಬೇಕು. ಮನೆಯಲ್ಲಿರುವ ನವಜಾತ ಶಿಶುಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ನೀಡಬೇಕು. ತಾಯಂದಿರ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಕುರಿತು ತಿಳಿಸಬೇಕು. ಪೋಲಿಯೋ ಕಾಯಿಲೆಯು ಒಂದು ವೈರಸ್ನಿಂದ ಹರಡುವ ಕಾಯಿಲೆಯಾಗಿದೆ. ಈ ಖಾಯಿಲೆಯಿಂದ ಶಾಶ್ವತ ಅಂಗವಿಕಲತೆ ಉಂಟಾಗುತ್ತದೆ.
ಅನಾಧಿಕಾಲದಿಂದಲೂ ಈ ಖಾಯಿಲೆಯು ನಮ್ಮ ನಡುವೆ ಇದ್ದು, ನಮ್ಮ ನಡುವಿನ ಬಹಳಷ್ಟು ಮಕ್ಕಳಿಗೆ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. ಪೋಲಿಯೋ ನಿರ್ಮೂಲನೆಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ 0-5 ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವುದು. ರಾಷ್ಟ್ರೀಯ ಲಸಿಕಾ ದಿನಗಳಲ್ಲಿ (ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ) 0-5 ವರ್ಷದ ಎಲ್ಲಾ ಮಕ್ಕಳಿಗೂ ಒಂದೇ ಬಾರಿಗೆ ಪೋಲಿಯೋ ಲಸಿಕೆಯನ್ನು ಹಾಕುವುದು ಮತ್ತು ಪೋಲಿಯೋ ಸಂಶಯಾಸ್ಪದ ಪ್ರಕರಣಗಳನ್ನು ಗುರುತಿಸಿ ಖಾಯಿಲೆಯನ್ನು ದೃಢಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಲ್ಲಾ ಸರ್ಜನ್ ಡಾ:ನಾಗೇಂದ್ರಪ್ಪ, ಆರ್ಸಿಹೆಚ್ ಡಾ.ರೇಣುಕಾರಾಧ್ಯ, ಡಿಹೆಚ್ಓ ಡಾ.ಷಣ್ಮುಖಪ್ಪ, ಪಾಲಿಕೆ ಆಯುಕ್ತರಾ ಮಹಾಂತೇಶ್ ಉಪಸ್ಥಿತರಿದ್ದರು.



