ದಾವಣಗೆರೆ: ಜೂನ್ 21 ರಂದು ನಡೆಯಲಿರುವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಈ ವರ್ಷದ ಧ್ಯೇಯವಾಕ್ಯವಾದ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” (Yoga for Healthy Aging) ಪರಿಕಲ್ಪನೆಯಡಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.
ಚನ್ನಗಿರಿ: ವಸತಿ ಯೋಜನೆಗೆ ಅರ್ಜಿ ಆಹ್ವಾನ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ: ದ್ವಿದಳಧಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಘಟಕ ಸ್ಥಾಪನೆಗೆ 25 ಲಕ್ಷದಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ
ಯೋಗ ದಿನಾಚರಣೆಯನ್ನು ಆಚರಿಸಲು ಸಮತಟ್ಟಾದ ಮೇಲ್ಮೈ ಹಾಗೂ ಸುಸಜ್ಜಿತ ವೇದಿಕೆ ಲಭ್ಯವಿರುವುದರಿಂದ, ಈ ಬಾರಿಯ ಯೋಗ ಪ್ರದರ್ಶನಕ್ಕೆ ಸ್ಥಳೀಯ ಪೊಲೀಸ್ ಕ್ರೀಡಾಂಗಣವೇ ಸೂಕ್ತ ಸ್ಥಳವಾಗಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದಲೇ ಯೋಗ ಪ್ರದರ್ಶನವನ್ನು ಏರ್ಪಡಿಸಬೇಕು. ಯೋಗ ತರಬೇತಿಯಲ್ಲಿ ಸುದೀರ್ಘ ಅನುಭವ ಹೊಂದಿರುವ ಖ್ಯಾತ ಯೋಗಪಟು ಮುರಳಿ ಅವರನ್ನು ಈ ಬಾರಿ ಯೋಗಾಸನಗಳ ಮಾರ್ಗದರ್ಶನ ನೀಡಲು ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶಿಷ್ಟಾಚಾರದ ಪ್ರಕಾರ ಸಚಿವರು, ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಸಕಾಲದಲ್ಲಿ ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಗೌರವಪೂರ್ವಕವಾಗಿ ಕರೆತರಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ತಾವೇ ಸ್ವತಃ ಯೋಗ ಮ್ಯಾಟ್ಗಳನ್ನು ತರಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸ್ಥಳದಲ್ಲೇ ಮ್ಯಾಟ್ಗಳ ವ್ಯವಸ್ಥೆ ಮಾಡಲಾಗುವುದು. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಕುಡಿಯುವ ನೀರು ಮತ್ತು ಲಘು ಉಪಹಾರದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಾತನಾಡಿ, ಜಿಲ್ಲೆಯ ವಿವಿಧ ಆಯುಷ್ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳ ವ್ಯಾಪ್ತಿ ಹಾಗೂ ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕನಿಷ್ಠ 100 ಜನರನ್ನು ಒಟ್ಟುಗೂಡಿಸಿ ದೊಡ್ಡ ಮಟ್ಟದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲು ಸೂಚಿಸಲಾಗುವುದು. ಈ ಮೂಲಕ ಸರ್ಕಾರದ ಆಯುಷ್ ಕೇಂದ್ರಗಳ ಸೌಲಭ್ಯಗಳು ಮತ್ತು ಆರೋಗ್ಯ ಲಾಭಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ 14 ದಿನಗಳ ಪ್ರಾಥಮಿಕ ತರಬೇತಿ ಹಾಗೂ ನಂತರ 1 ವರ್ಷದ ಉಚಿತ ಆನ್ಲೈನ್ ಯೋಗ ತರಬೇತಿಯನ್ನು ಆರಂಭಿಸಲಾಗಿದೆ. ಆಸಕ್ತ ಸಾರ್ವಜನಿಕರು ತಮಗೆ ಅನುಕೂಲಕರವಾದ ಸಮಯದಲ್ಲಿ (ಬೆಳಿಗ್ಗೆ ಅಥವಾ ಸಂಜೆ) ಗೂಗಲ್ ಮೀಟ್ ಲಿಂಕ್ habit.yoga (https://moa.habit.yoga) ಮೂಲಕ ಉಚಿತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಸಭೆಗೆ ಮಾಹಿತಿ ನೀಡಿದರು.
ಡಿವೈಎಸ್ಪಿ ಶರಣಪ್ಪ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕಿ ರೇಶ್ಮಾ ಕೌಸರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಘವೇಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


