ದಾವಣಗೆರೆ: ಮಳೆ ಕೊರತೆಯಿಂದ ಜಲಾಶಯ ಭರ್ತಿಯಾಗಿಲ್ಲ. ಹೀಗಾಗಿ ಈ ಬಾರಿಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ. ರೈತರು ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮನವಿ ಮಾಡಿದೆ.

ಈ ಬಗ್ಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಪ್ರಕಟಣೆ ಹೊರಡಿಸಿದೆ. ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು
ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರುಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು
ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಮುಂಬರುವ ದಿನಗಳಲ್ಲಿ ಸಾಕಷ್ಟು
ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ,
ಹಾಗೂ ಅಧೀಕ್ಷಕ ಅಭಿಯಂತರರು, ಕ.ನೀ.ನಿ.ನಿ., ಕಾರ್ಯದರ್ಶಿ ತಿಳಿಸಿದ್ದಾರೆ.


