ದಾವಣಗೆರೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರೆಲ್ಲರೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜಿಲ್ಲಾಡಳಿತದೊಂದಿಗೆ ಸಕ್ರಿಯವಾಗಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮಾತನಾಡಿ, ಬಿ.ಎಲ್.ಒ (BLO) ಗಳು ಮನೆ ಮನೆಗೆ ಭೇಟಿ ನೀಡಿ ಎನ್ವಿಮರೇಷನ್ ಫಾರಂ (Enumeration Form) ಗಳನ್ನು ವಿತರಿಸುತ್ತಿದ್ದಾರೆ. ನಾಗರಿಕರು ಈ ಫಾರಂಗಳನ್ನು ಸೂಕ್ತವಾಗಿ ಭರ್ತಿ ಮಾಡಿ, ಸಹಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಮರಳಿ ಬಿ.ಎಲ್.ಒ ಗಳಿಗೆ ತಲುಪಿಸಬೇಕು ಮತ್ತು ಈ ಕುರಿತ ಮಾಹಿತಿಯನ್ನು ಇತರರೊಂದಿಗೂ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದರು.
ದಾವಣಗೆರೆ: ಲೋಕಾಯುಕ್ತ ಬಲೆಗೆ ಬಿದ್ದ
ಸರ್ವೆ ಇಲಾಖೆಯ ಸೂಪರ್ ವೈಸರ್ , ಭೂಮಾಪಕ
ಮತದಾರರ ಪಟ್ಟಿ ಪರಿಷ್ಕರಣೆಯು ಕೇವಲ ಬಿ.ಎಲ್.ಒ ಗಳ ಕರ್ತವ್ಯವಷ್ಟೇ ಅಲ್ಲ, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ (PDO) ಮೇಲೆಯೂ ಹೆಚ್ಚಿನ ಜವಾಬ್ದಾರಿಯಿದೆ. ಪ್ರತಿ ಪಂಚಾಯಿತಿಯ ಬಿಲ್ ಕಲೆಕ್ಟರ್ಸ್, ನೀರಗಂಟೆಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಬಿ.ಎಲ್.ಒ ಗಳ ಜೊತೆ ನಿಂತು, ಮನೆ ಮನೆಗೆ ತೆರಳಿ ಫಾರಂಗಳನ್ನು ಭರ್ತಿ ಮಾಡಿಕೊಡುವಲ್ಲಿ ಪೂರ್ಣ ಸಹಕಾರ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅನಿವಾರ್ಯ ಕಾರಣಗಳಿಂದ ಅಥವಾ ಪ್ರಕೃತಿ ವಿಕೋಪಗಳಂತಹ (ಮನೆ ಕುಸಿತ, ಬೆಂಕಿ ಅವಘಡ) ಸಂದರ್ಭಗಳಲ್ಲಿ ದಾಖಲೆಗಳನ್ನು ಕಳೆದುಕೊಂಡು ಯಾವುದೇ ಗುರುತಿನ ಚೀಟಿ ಇಲ್ಲದಿರುವ ಸಾರ್ವಜನಿಕರು ಹಾಗೂ ರೈತರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ವಿಶೇಷ ಕ್ರಮ ಕೈಗೊಂಡಿದೆ. ಇಂತಹ ವ್ಯಕ್ತಿಗಳನ್ನು ಪಿಡಿಒಗಳು ತಹಶೀಲ್ದಾರ್ ಕಚೇರಿಗೆ ಕಳುಹಿಸಿಕೊಡಬೇಕು. ಕೇವಲ ಒಂದೇ ದಿನದಲ್ಲಿ ಅವರಿಗೆ ‘ಶಾಶ್ವತ ನಿವಾಸಿ ಪ್ರಮಾಣಪತ್ರ’ (Permanent Residential Certificate) ನೀಡುವಂತೆ ಈಗಾಗಲೇ ಎಲ್ಲಾ ತಹಶೀಲ್ದಾರ್ಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹರ ಹೆಸರನ್ನು ಸೇರ್ಪಡೆಗೊಳಿಸುವ ಈ ಪ್ರಕ್ರಿಯೆಯನ್ನು ಕೇವಲ ಸಲಹೆಯಾಗಿ ಪರಿಗಣಿಸದೇ, ಅತ್ಯಂತ ಗಂಭೀರ ವಿಷಯವಾಗಿ ಸ್ವೀಕರಿಸಬೇಕು. ಜಿಲ್ಲಾಡಳಿತ, ಚುನಾವಣಾ ಆಯೋಗ ಹಾಗೂ ಸರ್ಕಾರದ ಪರವಾಗಿ ಕೈಗೊಳ್ಳಲಾಗಿರುವ ಈ ಮಹತ್ವದ ಕಾರ್ಯಕ್ಕೆ ಅಧಿಕಾರಿಗಳು, ಪಿಡಿಒಗಳು ಮತ್ತು ಜಿಲ್ಲೆಯ ಸಮಸ್ತ ಸಾರ್ವಜನಿಕರು ಕೈಜೋಡಿಸಬೇಕೆಂದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಪಿಡಿಓಗಳು ಉಪಸ್ಥಿತರಿದ್ದರು.


