ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 300 ಚೀಲ ಪಡಿತರ ಅಕ್ಕಿಯನ್ನು ಪೊಲೀಸ್ ಇಲಾಖೆ , ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಜಗಳೂರು ತಾಲ್ಲೂಕಿನ ಕಾನನಕಟ್ಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ 300 ಚೀಲ ಪಡಿತರ ಅಕ್ಕಿಯನ್ನು ಸ ಲಾರಿ ಮೂಲಕ ಸಾಗಿಸುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ.
ಪಡಿತರ ಅಕ್ಕಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿ ಶಿವಪ್ರಕಾಶ್, ಎಪಿಎಂಸಿ ಅಧಿಕಾರಿ ಮನು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸಿದ್ರಾಮಯ್ಯ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಬೆಳಿಗ್ಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಯನ್ನು ತಡೆದು ಪರಿಶೀಲಿಸಿದ್ದು, ಲಾರಿಯಲ್ಲಿ 300 ಚೀಲ ಪಡಿತರ ಅಕ್ಕಿ ತುಂಬಿದ ಚೀಲಗಳಿರುವುದು ಕಂಡುಬಂದಿದೆ.
ಪಡಿತರ ಅಕ್ಕಿ ತುಂಬಿದ ಗೋಣಿ ಚೀಲಗಳ ಮೇಲೆ ‘ಗವರ್ನಮೆಂಟ್ ಆಫ್ ಹರಿಯಾಣ ಎಂದು ಇದೆ. ಪಡಿತರ ಅಕ್ಕಿ ಸಾಗಾಟದ ಬಗ್ಗೆ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


