ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ‘ಭಾರತ್ ಜೋಡೋ ಯುವ ಸಂಘಗಳ’ (ಯೂತ್ ಕ್ಲಬ್) ನೋಂದಣಿ ಪ್ರಕ್ರಿಯೆಯನ್ನು ಮುಂದಿನ 4 ವಾರಗಳಲ್ಲಿ ಶೇ. 100ರಷ್ಟು ಪೂರ್ಣಗೊಳಿಸಿ, ಯುವಜನರ ಸಬಲೀಕರಣ, ಸಮುದಾಯ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 15ರ ಒಳಗಾಗಿ ಹೊಸ ಸಂಘಗಳ ನೋಂದಣಿ ಮತ್ತು ಪ್ರಮಾಣಪತ್ರ ವಿತರಣೆಗೆ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆಯಬೇಕು. 16 ರಿಂದ 35 ವರ್ಷದವರೆಗಿನ ಯುವಕ-ಯುವತಿಯರು ಸೇರಿದಂತೆ ಎಲ್ಲಾ ಸಮುದಾಯದವರನ್ನು ಒಳಗೊಂಡಂತೆ ನೂತನ ಸಹಕಾರ ಸಂಘಗಳನ್ನು ರಚಿಸಿ, ನೋಂದಣಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4000 ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆ ಯಲ್ಲಿ ಸರಾಸರಿ 6000 ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆಯಲ್ಲಿ ಸರಾಸರಿ 8000 ಜನ ಸಂಖ್ಯೆಗೆ ಒಂದು ಸಂಘ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ 10000 ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.
ತಾಲೂಕು ಮಟ್ಟದಲ್ಲಿ ಪಿಡಿಒ (PDO), ಆರ್ಐ (RI) ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅಧ್ಯಕ್ಷರು, ಉಪಾಧ್ಯಕ್ಷರು, ಖಜಾಂಜಿ ಮತ್ತು 12 ಜನ ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಂಘಗಳನ್ನು ರಚಿಸಬೇಕು. ಬೈಲಾ (By-law) ಮಾದರಿಯನ್ನು ಸಿದ್ಧಪಡಿಸಿ, ಅದನ್ನು ಸುತ್ತೋಲೆ (Circulate) ಮಾಡಿ ತಕ್ಷಣವೇ ನೋಂದಣಿ ಆರಂಭಿಸಬೇಕು. ಆಗಸ್ಟ್ ಅಂತ್ಯದ ವೇಳೆಗೆ ಈ ಸಂಪೂರ್ಣ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕು ಎಂದು ತಿಳಿಸಿದರು.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ (Parade) ಆಯ್ಕೆಯಾದ ಯುವ ಸಂಘಗಳ ತಂಡಗಳು, ಪೌರಕಾರ್ಮಿಕರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು. ಇದೇ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳು ಹಾಗೂ ಎಸ್ಐಆರ್ (SIR) ಕುರಿತು ‘ಐಇಸಿ’ (IEC) ಚಟುವಟಿಕೆಗಳು ಮತ್ತು ಜಾಗೃತಿ ನಾಟಕಗಳನ್ನು (Skit) ಏರ್ಪಡಿಸಲು ಕ್ರಮ ಕೈಗೊಳ್ಳಬೇಕು, ಗ್ರಾಮ ಪಂಚಾಯಿತಿಗಳನ್ನು ಕೇಂದ್ರವಾಗಿಟ್ಟುಕೊಂಡು ಶಾಲಾ-ಕಾಲೇಜುಗಳು, ಸಮುದಾಯ ಭವನಗಳು, ದೇವಸ್ಥಾನಗಳು ಹಾಗೂ ಸರ್ಕಾರಿ ಕಟ್ಟಡಗಳನ್ನು ಬಳಸಿಕೊಂಡು ಯುವಕರನ್ನು ಸಂಘಟಿಸಲು ಸೂಚಿಸಿದರು.
ನೋಡಲ್ ಅಧಿಕಾರಿಗಳ ನೇಮಕ: ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒ (PDO) ಹಾಗೂ ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತಿ ಇಒ (EO) ಅವರಿಗೆ ಜವಾಬ್ದಾರಿ ನೀಡಲಾಗಿದೆ. ನಗರ ಪ್ರದೇಶಗಳಿಗೆ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು.
ಸಂಘದ ಚಟುವಟಿಕೆಗಳು : ಕ್ರೀಡೆ ಮತ್ತು ಫಿಟ್ ನೆಸ್, ಸಮುದಾಯ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯ, ಕೌಶಲ್ಯ ಮತ್ತು ಯುವ ಸಬಲೀಕರಣ, ಸ್ವಾತಂತ್ರ್ಯ ದಿನಾಚರಣೆ, ಗಣರಾಜೋತ್ಸವ , ಗಾಂಧಿಜಯಂತಿ, ಅಂಬೇಡ್ಕರ್ ಜಯಂತಿ, ಬುದ್ಧ ಜಯಂತಿ, ಗಾಂಧಿ ಹುತಾತ್ಮರಾದ ದಿನಗಳ ಆಚರಣೆ, ವಿಪತ್ತು ನಿರ್ವಹಣೆ ಮತ್ತು ಪರಿಹಾರ, ಜಲ ಸಂಕ್ಷಣೆ ಚಟುವಟಿಕೆಗಳು, ಗ್ರಾಹಕ ಜಾಗೃತಿ ಅಭಿಯಾನಗಳು, ಸೈಬರ್ ಸುರಕ್ಷತಾ ಜಾಗೃತಿ, ಸಂಚಾರ ಜಾಗೃತಿ ಅಭಿಯಾನ , ಕೃಷಿ ಮತ್ತು ಗ್ರಾಮೀನ ನಾವೀನ್ಯತೆ ಇತ್ಯಾದಿ ಹಾಗೂ ಧೂಮಪಾನ, ಮಧ್ಯಪಾನ , ಡ್ರಗ್ಸ್ ವಿರುದ್ಧ ಚಟುವಟಿಕೆಗಳು ವಾರ್ಷಿಕ ಚಟುವಟಿಕೆಗಳನ್ನು ಕ್ಯಾಲೆಂಡರ್ ತಯಾರಿಸಿ ಅನುಷ್ಠಾನಗೊಳಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ, “ಯುವಜನರನ್ನು ಸಂಘಟಿಸಿ ಸಂಸ್ಕೃತಿ, ಅಧ್ಯಯನ, ಪರಿಸರ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಮೂಡಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆಗೆ ಚುರುಕು ನೀಡಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಯುವಕರನ್ನು ಗುರುತಿಸಿ ನೋಂದಣಿ ಮಾಡಿಸಲಾಗುವುದು. ಬರುವ ಆಗಸ್ಟ್ನಲ್ಲಿ ಪರಿಸರ ಹಾಗೂ ಅರಣ್ಯ ಸಂರಕ್ಷಣೆ ಜಾಗೃತಿಗಾಗಿ ಪ್ರಮುಖ ಕ್ರೀಡಾಂಗಣದಲ್ಲಿ ಚಟುವಟಿಕೆಗಳು ಹಾಗೂ ಪಾದಯಾತ್ರೆಯನ್ನು ಆಯೋಜಿಸಲಾಗುವುದು” ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಣುಕಾ, ಡಿಡಿಪಿಐ ಕೃಷ್ಣ ಪ್ರಸಾದ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


