ನವದೆಹಲಿ: ಕೊರೊನಾಗೆ ದೆಹಲಿ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಸೋಂಕು ತಗಲಿ ಸಾವನ್ನಪ್ಪಿದ್ದಾರೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನ ಹಿರಿಯ ವೈದ್ಯರರಾದ ಡಾ.ಜಿತೇಂದ್ರ ನಾಥ್ ಪಾಂಡೆ (78) ಶನಿವಾರ ಸಾವನ್ನಪ್ಪಿದ್ದಾರೆ. ಏಮ್ಸ್ನ ಶ್ವಾಸಕೋಶಶಾಸ್ತ್ರ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವಿಭಾಗದಿಂದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿತ್ತು.

ಜಿತೇಂದ್ರ ನಾಥ್ ಪಾಂಡೆ ಮತ್ತು ಅವರ ಪತ್ನಿಗೂ ಕಳೆದ ಮಂಗಳವಾರ ಕೊರೊನಾದ ಕೆಲ ಲಕ್ಷಣಗಳು ಕಾಣಿಸಿಕೊಂಡಿದ್ದವು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಇತ್ತೀಚೆಗೆ ಅವರು ರೋಗದಿಂದ ಗುಣಮುಖರಾಗುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದರು ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕು ಪಾಂಡೆಯವರಿಗೆ ಪಾಸಿಟಿವ್ ಬಂದ ನಂತರ ನಾವು ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಲೇ ಇದ್ದೇವು. ಇತ್ತೀಚೆಗಷ್ಟೇ ಪಾಂಡೆಯವರೇ ಸೋಂಕಿನಿಂದ ನಾನು ಗುಣಮುಖನಾಗುತ್ತಿದ್ದೇನೆ. ಬಹುಬೇಗ ಆಸ್ಪತ್ರೆಗೆ ಬರುತ್ತೇನೆ ಎಂದು ಹೇಳಿದ್ದರು. ಆದರೆ ಶನಿವಾರ ರಾತ್ರಿ ಊಟ ಮಾಡಿ ಮಲಗಿದವರು ಅಲ್ಲೇ ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ.



