ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್ 19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪ್ರತಿ ದಿನ ರಾತ್ರಿ 8 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಅವಶ್ಯಕವಲ್ಲದ ಚಟುವಟಿಕೆಗಳ, ವ್ಯಕ್ತಿಗಳ ಹಾಗೂ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.
ಜುಲ್ಐ 05 ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳು ಕಟ್ಟುನಿಟ್ಟಾಗಿ ಭಾನುವಾರ ಸಂಪೂರ್ಣ ನಿಷೇಧ ಇರಲಿದೆ. ಆಗಸ್ಟ್ 2 ರವರೆಗ ಲಾಕ್ಡೌನ್ ಜಾರಿ ಇರುತ್ತದೆ. ಆದರೆ ಲಾಕ್ಡೌನ್ ಅವಧಿಯಲ್ಲಿ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುದಿಲ್ಲ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 & 270 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



