ಬೆಂಗಳೂರು: ಕೊರೊನಾ ಕಾರಣದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಂಗನವಾಡಿಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು, ಗ್ರಾಮ ಪಂಚಾಯಿತಿಗಳ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲು ತಿಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಅಂಗನವಾಡಿ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಬೇಕು. ಕೇಂದ್ರದ ಪೀಠೋಪಕರಣ, ಶೌಚಾಲಯ ಶುಚಿಗೊಳಿಸುವುದು. ಮೂರರಿಂದ ಆರು ವರ್ಷದ ಮಕ್ಕಳಿಗೆ ಮಧ್ಯಾಹ್ನ 12 ಗಂಟೆಯವರೆಗೆ ಚಟುವಟಿಕೆ ಕೈಗೊಳ್ಳಬಹುದು. 3 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿಗೆ ಬರದಂತೆ ನೋಡಿಕೊಳ್ಳುವುದು. ಕನಿಷ್ಠ 5 ಮಕ್ಕಳು ಹಾಜರಾಗಿರುವಂತೆ ನೋಡಿಕೊಳ್ಳಬೇಕಿದೆ. ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ. ಆದರೆ, ರಾಜ್ಯದಲ್ಲಿ 1 -8 ನೇ ತರಗತಿ ಇನ್ನೂ ಆರಂಭವಾಗಿಲ್ಲ. ಇದಕ್ಕಿಂತ ಮೊದಲೇ ಅಂಗನವಾಡಿ ಆರಂಭಿಸಲಾಗುತ್ತಾ ಎನ್ನುವ ಪ್ರಶ್ನೆ ಉದ್ಭವಿಸಿದೆ.