ದಾವಣಗೆರೆ: ಮಹಾನಗರ ಪಾಲಿಕೆ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಂದ ಸಂಗ್ರಹಿಸುವ ಆಸ್ತಿ ತೆರಿಗೆಯನ್ನು ಶೇ.15ರಿಂದ 30 ರಷ್ಟು ಹೆಚ್ಚು ಮಾಡಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಹಲವು ಉದ್ಯಮಗಳು ಬಂದ್ ಆಗಿ, ಕೆಲಸ ಕಳೆದುಕೊಂಡು ಸಾರ್ವಜನಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಲು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಾರ್ವಜನಿಕರ ಸಂಕಷ್ಟವನ್ನು ಅರಿಯದೇ ಮನೆ ಕಂದಾಯವನ್ನು ಶೇ.20ಕ್ಕೆ ಮತ್ತು ವಾಣಿಜ್ಯ ತೆರಿಗೆಯನ್ನು ಶೇ.24 ರಷ್ಟು ಹೆಚ್ಚಿಸುವ ಮೂಲಕ ಜನರ ಗಾಯದ ಮೇಲೆ ಬರೆ ಎಳೆದಿದೆ. ಹೆಚ್ಚಿಸಿರುವ ಆಸ್ತಿ ತೆರಿಗೆಯನ್ನು ತಕ್ಷಣ ಕಡಿತ ಗೊಳಿಸಿ, ಹಿಂದೆ ಸಂಗ್ರಹಿಸುತ್ತಿದ್ದ ತೆರಿಗೆಯನ್ನು ಮುಂದುವರೆಸಬೇಕು. ಇನ್ನೂ ಎರಡು ವರ್ಷ ಯಾವುದೇ ಕಂದಾಯವನ್ನು ಹೆಚ್ಚಿಸಬಾರದು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ಗಡಿಗುಡಾಳ್ ಮಂಜುನಾಥ, ಮುಖಂಡರಾದ ಅಯೂಬ್ ಪೈಲ್ವಾನ್, ಡೋಲಿ ಚಂದ್ರು ಹಾಜರಿದ್ದರು.