ದಾವಣಗೆರೆ: ಸರಳವಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಜ. 26ರಂದು 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಹೇಳಿದರು.

ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಹಬ್ಬವಾಗಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಕಾರಣದಿಂದಾಗಿ ಈ ವರ್ಷವೂ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ, ಬಲಿದಾನಗಳಿಗೆ ನಾವು ಆದರಪೂರ್ವಕವಾಗಿ ಗೌರವ ಸಮರ್ಪಿಸೋಣ ಎಂದರು.

ಕಾರ್ಯಕ್ರಮದ ಅಂಗವಾಗಿ ಜನವರಿ 26 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ನಿಯಮಾನುಸಾರ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 8.30 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಕೋವಿಡ್ ನಿಯಂತ್ರಣದ ದೃಷ್ಟಿಯಿಂದ, ಸಮಾರಂಭದಲ್ಲಿ ಯಾವುದೇ ಶಾಲಾ ಮಕ್ಕಳು ಅಥವಾ ಸಾರ್ವಜನಿಕರು ಪಾಲ್ಗೊಳ್ಳುತ್ತಿಲ್ಲ. ಆದರೆ ಅಂದು ಸರ್ಕಾರದ ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಹಾಜರಿರಬೇಕು. ಕೋವಿಡ್ ನಿಯಂತ್ರಣ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭ ಜರುಗಿಸಲು ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ, ಹಾಗೂ ಗಣರಾಜ್ಯೋತ್ಸವ ಆಚರಣೆ ಸಂಬಂಧ ಸರ್ಕಾರ ನೀಡುವ ಮಾರ್ಗಸೂಚಿಗಳಿಗನುಗುಣವಾಗಿ ಕಾರ್ಯಕ್ರಮ ಆಚರಿಸಲಾಗುವುದು ಎಂದರು. ಪಥ ಸಂಚಲನದಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳದಿರುವುದರಿಂದ ಪೊಲೀಸ್, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಜೊತೆಗೆ ಗೃಹರಕ್ಷಕ ದಳದ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಕಾರ್ಯಕ್ರಮ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ ಮಕ್ಕಳಿಗೆ ಸರ್ಕಾರದಿಂದ ನೀಡಲಾಗುವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು, ಅಲ್ಲದೆ ಕೃಷಿಯಲ್ಲಿ ಉತ್ತಮ ಸಾಧನೆಗೈದ ರೈತರಿಗೆ ಕೃಷಿ ಇಲಾಖೆಯಿಂದ ನೀಡಲಾಗುವ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ನೀಡಿ ಸನ್ಮಾನಿಸಲಾಗುವುದು ಎಂದರು.

ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಧಿಕಾರಿ, ತಹಶೀಲ್ದಾರರು, ಪೊಲೀಸ್ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಇವರುಗಳು ನೋಡಿಕೊಂಡು ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಸಹಕರಿಸಬೇಕು ಎಂದರು.

ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತೆಯನ್ನು ಕಾಪಾಡಬೇಕು. ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳಲ್ಲಿ, ನಗರದ ಪ್ರಮುಖ ವೃತ್ತಗಳಿಗೆ ಸಂಭಂಧಿಸಿದ ಇಲಾಖೆಗಳು ದೀಪಾಲಂಕಾರ ಮಾಡಿಸಬೇಕು ಎಂದು ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ನಿಗದಿಪಡಿಸಿದ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್ ದೀಪಾಲಂಕಾರ ಮಾಡಿಸಬೇಕು. ಧ್ವಜ ಸಂಹಿತೆ ಕುರಿತಂತೆ ಜ. 24 ರಂದು ದಾವಣಗೆರೆಯ ಡಿ.ಆರ್. ಕಚೇರಿ ಆವರಣದಲ್ಲಿ ಸೇವಾದಳದ ವತಿಯಿಂದ ಎಲ್ಲ ಇಲಾಖೆಗಳಿಗೆ ತರಬೇತಿ ಏರ್ಪಡಿಸಲಾಗಿದ್ದು, ಆಸಕ್ತ ಮತ್ತು ಅಗತ್ಯವಿರುವ ಸಿಬ್ಬಂದಿಗಳು ಭಾಗವಹಿಸಬಹುದಾಗಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ ಅಧೀಕ್ಷಕ ರಾಮಗೊಂಡ ಬಸರಗಿ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *