ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಾದ್ಯಂತ ಭತ್ತದ ಬೆಳೆ ತೆನೆ ಒಡೆಯುವ ಹಂತದವರೆಗೆ ಬಂದಿದ್ದು, ಅಲ್ಲಲ್ಲಿ ಬೆಂಕಿರೋಗದ ಬಾಧೆ ಕಾಣಿಸಿಕೊಂಡಿದೆ.
ಮೋಡ ಮುಸುಕಿದ ಹಾಗೂ ಹೆಚ್ಚು ಆದ್ರತೆಯಿಂದ ಕೂಡಿದ ವಾತಾವರಣದಲ್ಲಿ ಬಾಧೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಇದೊಂದು ಶಿಲೀಂಧ್ರದಿಂದ ಬರುವ ರೋಗವಾಗಿದ್ದು, ಬೆಳೆಯ ಎಲ್ಲಾ ಹಂತಗಳಲ್ಲೂ ಕಾಣಿಸಿಕೊಂಡು ಇಳುವರಿ ಮೇಲೆ ಪರಿಣಾಮ ಬೀರುತ್ತದೆ.
ಗರಿಗಳ ಮೇಲೆ ವಜ್ರಾಕಾರದ ಕಂದು ಬಣ್ಣದ ಚುಕ್ಕೆಗಳುಂಟಾಗಿ ಆ ಚುಕ್ಕೆಗಳ ಮಧ್ಯಭಾಗವು ಬೂದು ಬಣ್ಣ ಹೊಂದಿರುತ್ತದೆ. ಚುಕ್ಕೆಗಳು ದೊಡ್ಡದಾದಂತೆ ಒಂದಕ್ಕೊಂದು ಸೇರಿಕೊಂಡು ಎಲೆಗಳು ಸುಟ್ಟಂತೆ ಭಾಸವಗುತ್ತದೆ. ಮತ್ತು ತೆನೆಯ ಹಂತದಲ್ಲಿ ಹಾಗೂ ತೆನೆಯ ಕುತ್ತಿಗೆಯ ಭಾಗದಲ್ಲಿ ಕಂದು ಮಚ್ಚೆ ಕಂಡುಬಂದು ನಂತರ ತೆನೆ ಒಣಗಿ ಕಾಳು ಜೊಳ್ಳಾಗುತ್ತವೆ.
ಬೆಂಕಿ ರೋಗದ ಲಕ್ಷಣಕಂಡು ಬಂದಾಗ ಗದ್ದೆಯಲ್ಲಿ ಹಾಗೂ ಗದ್ದೆ ಬದುಗಳಲ್ಲಿ ಕಳೆ ತೆಗೆದು ಜಮೀನಿನಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಹಾಗೂ ತಕ್ಷಣ ಸಾರಜನಕಯುಕ್ತ ರಾಸಾಯನಿಕ ಗೊಬ್ಬರ ಕೊಡುವುದನ್ನು ನಿಲ್ಲಿಸಿ. ಆದಷ್ಟು 2 ಹಂತಗಳಲ್ಲಿ ಮೇಲುಗೊಬ್ಬರವಾಗಿ ಕೊಡಬೇಕು. ಸಾವಯವ ಹಾಗೂ ನೈಸರ್ಗಿಕ ಕೃಷಿ ಅನುಸರಿಸುತ್ತಿರುವ ರೈತರು 10 ಲೀಟರ್ ನೀರಿಗೆ 1 ಲೀ. ಹುಳಿಮಜ್ಜಿಗೆ ಬೆರೆಸಿ ಸಿಂಪಡಿಸಬೇಕು.
ರಾಸಾಯನಿಕ ಸಿಂಪರಣೆಗಾಗಿ 4 ಗ್ರಾಂ ಕಾರ್ಬನ್ ಡೈಜಿಂ 50 ಡಬ್ಲ್ಯು.ಪಿ., 0.6 ಗ್ರಾಂ ಟ್ರ್ಯೈಸೈಕ್ಲೊಜೋಲ್ 75 ಡಬ್ಲ್ಯು.ಪಿ., 1ಮಿ.ಲೀ. ಎಡಿಫಿನ್ಫಾಸ್ 50 ಇ.ಸಿ. , 1 ಮಿ.ಲೀ. ಕಿಟಾಜಿನ್ 48 ಇ.ಸಿ ಇವುಗಳಲ್ಲಿ ಯಾವುದಾದರೊಂದನ್ನು 1 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರಾದ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.



