ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿರುವ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಜತೆ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ಧರಿದ್ದಾರೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಸೆ. ಈ ಬಗ್ಗೆ ಅನೇಕ ವರ್ಷಗಳಿಂದ ಹೋರಾಟ ನಡೆದುಕೊಂಡು ಬರಲಾಗುತ್ತಿದೆ. ಸ್ವಾಮೀಜಿ ಜೊತೆ ಹೋರಾಟದಲ್ಲಿ ಭಾಗಿಯಾಗಿದ್ದವರು ಬುದ್ಧಿವಂತರಿದ್ದಾರೆ. ಹೀಗಾಗಿ ಶ್ರೀಗಳು ಮುಖ್ಯಮಂತ್ರಿಯೊಂದಿಗೆ ಮಾತುಕತೆಗೂ ಬರಬೇಕು ಎಂದರು.
ಮೀಸಲಾತಿ ಪರಿಹಾರದ ಬಗ್ಗೆ ಮುಖ್ಯಮಂತ್ರಿ ಜೊತೆ ಕುಳಿತು ಚರ್ಚಿಸಬಹುದು. ಮುಖ್ಯಮಂತ್ರಿ ತಮ್ಮ ಇತಿಮಿತಿಯಲ್ಲಿ ಬೇಡಿಕೆ ಈಡೇರಿಸಲು ಸಿದ್ಧರಿದ್ದಾರೆ . ಸೋಮವಾರ ಸಚಿವರಿಗೆ ಖಾತೆ ಹಂಚಿಕೆ ಆಗಲಿದೆ. ಯಾವುದೇ ಖಾತೆ ಕೊಟ್ಟರೂ ಸರ್ಕಾರ ಹಾಗೂ ಪಕ್ಷಕ್ಕೆ ಒಳ್ಳೆಯ ಹೆಸರು ತರುತ್ತೇನೆ. ಉಮೇಶ್ ಕತ್ತಿ ಅವರು ಎಂಟು ಬಾರಿ ಶಾಸಕರಾಗಿದ್ದಾರೆ. ಅವರ ಹಿರಿತನ ಆಧರಿಸಿ ಮುಖ್ಯಮಂತ್ರಿ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂದು ತಿಳಿಸಿದರು.



