ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿಗೆ ಕಾರು ಹಾಗೂ ಲಾರಿಗಳು ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಹುಯಿಲುಗೊಳದ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಮೃತ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿಯ ಟೈರ್ ಸ್ಫೋಟಗೊಂಡು ಘಟನೆ ಸಂಭವಿಸಿದೆ.
ಇದರಿಂದ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಇದಕ್ಕೆ ಮತ್ತೊಂದು ಕಾರು ಮತ್ತು ಲಾರಿಗಳು ಡಿಕ್ಕಿಯಾಗಿದೆ. ಪಲ್ಟಿಯಾದ ಲಾರಿಯಿಂದ ಈರುಳ್ಳಿ ಚೀಲ ರಸ್ತೆಗೆ ಬಿದ್ದು, ಹೆದ್ದಾರಿ ತುಂಬಾ ಬಿದ್ದುವೆ. ರಸ್ತೆಯಲ್ಲಿ ಸರಣಿ ಅಪಘಾತದಿಂದ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಒಂದು ಕಿ.ಮೀ ವರೆಗೆ ವಾಹನಗಳು ನಿಂತಿದ್ದವು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



