ಚಿತ್ರದುರ್ಗ: ದಾವಣಗೆರೆ ವಿರಕ್ತ ಮಠದಲ್ಲಿ 20ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಹೆಚ್.ಏಕಾಂತಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಮುರುಘಾ ಮಠದ ಶಾಖಾ ಮಠವಾದ ದಾವಣಗೆರೆ ವಿರಕ್ತ ಮಠದ ಬಸವಪ್ರಭುಶ್ರೀ 20ಲಕ್ಷ ರೂ.ಅವ್ಯವಹಾರ ನಡೆಸಿದ್ದಾರೆ. ಭಾರೀ ಹಣದ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿದರೆ ಅವ್ಯವಹಾರ ಬಯಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿದ್ದ ಪೋಸ್ಕೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು, ಮುರುಘಾ ಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರ್ಕಾರ ಮುರುಘಾ ಮಠದ ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿದೆ.



