ಡಿವಿಜಿ ಸುದ್ದಿ, ದಾವಣಗೆರೆ: ದೀಪಾವಳಿ ಹಬ್ಬವನ್ನು ನ.14 ರಿಂದ16 ರವರೆಗೆ ಆಚರಿಸಲಾಗುತ್ತಿದ್ದು, ಕೊರೊನಾ ಪಾಸಿಟಿವ್ ಭೀತಿಯ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ.
ಪ್ರಸ್ತುತ ಕೋವಿಡ್-19 ಸಾಂಕ್ರಮಿಕ ರೋಗವು ವ್ಯಾಪಕವಾಗಿ ಹರಡುವ ಭೀತಿ ಇರುವುದರಿಂದ, ಹಬ್ಬವನ್ನು ಈ ಬಾರಿ ಸರಳ, ಮಾಲಿನ್ಯ ರಹಿತವಾಗಿ ಆಚರಿಸಬೇಕಾಗಿರುತ್ತದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸೋಂಕಿನ ಸರಪಳಿಯನನು ಕತ್ತರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ. ಈ ಕುರಿತು ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ಡೆ-2005 ಕಾಯ್ದೆಯಡಿ ದೀಪಾವಳಿ ಹಬ್ಬದ ಆಚರಣೆ ಸಂಬಂಧ ಪರಿಷ್ಕøತ ಮಾರ್ಗಸೂಚಿ ಹೊರಡಿಸಿದೆ. ಇದರನ್ವಯ ಹಸಿರು ಪಟಾಕಿ ಗಳನ್ನು ಹೊರತುಪಡಿಸಿ ಉಳಿದ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿ ಮಳಿಗೆಗಳನ್ನು ನ. 07 ರಿಂದ ನ. 16 ರವರೆಗೆ ಮಾತ್ರ ತೆರೆದಿರಬೇಕು. ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತೆ ಇರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 06 ಮೀ. ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಪರವಾನಗಿ ಪತ್ರದ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು, ಅಲ್ಲದೆ ಪರವಾನಗಿ ಪತ್ರ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು ಎಂದು ತಿಳಿಸಿದರು.
ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಟ 06 ಅಡಿ ಸಾಮಾಜಿಕ ಅಂತರ ಗುರುತಿಸಿ, ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲರೂ ತಪ್ಪದೆ ಮಾಸ್ಕ್ ಧರಿಸಿರಬೇಕು. ಹಸಿರು ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.
ದೀಪಾವಳಿ ಹಬ್ಬವನ್ನು ಆಚರಿಸುವ ಸಂಬಂಧವಾಗಿ ಮತ್ತು ಈ ಹಬ್ಬದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಸಿಡಿಸುವು ಕುರಿತು ಪರಿಷ್ಕೃತ ಮಾರ್ಗಸೂಚಿಗಳು ನ.07 ರಿಂದ ಜಾರಿಗೊಂಡು ನ.16 ರವರೆಗೆ ಚಾಲ್ತಿಯಲ್ಲಿರುತ್ತದೆ.
ಈ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮಪಂಚಾಯತ್ ಹಾಗೂ ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹನಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.