ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆ ಹಿನ್ನೆಲೆ ಹೊಸ ವರ್ಷಾಚರಣೆಗೆ ಸೋಮವಾರದೊಳಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಿಂದ ಕೊರೊನಾ ನಮ್ಮೆಲ್ಲರನ್ನೂ ಕಾಡಿತ್ತು.ಈಗ ಒಂದು ಹಂತಕ್ಕೆ ಬರುತ್ತಿರುವ ಸಂದರ್ಭದಲ್ಲೇ ಹೊಸ ಮಾದರಿಯ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ತಂದಿದೆ ಎಂದು ಹೇಳಿದರು.
ಸೋಂಕು ಹಬ್ಬುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಕುರಿತು ಮಾರ್ಗಸೂಚಿಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರು ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸುತ್ತಾರೆ ಎಂದು ತಿಳಿಸಿದರು.
ಕೊರೊನಾ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೊರ ದೇಶಗಳಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಅದರಲ್ಲೂ ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ.ಯುರೋಪ್ ದೇಶಗಳಿಂದ ಬಂದವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದರು. ಈಗಾಗಲೇ ವಿದೇಶದಿಂದ ಬಂದವರನ್ನು ಪತ್ತೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿದೇಶದಿಂದ ಬಂದವರು ಕೂಡ ನಮಗೆ ಸಹಕಾರ ನೀಡಬೇಕೆಂದು ಎಂದರು.



