ದಾವಣಗೆರೆ: ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಜ.6 ರಂದು ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಯ ಸಮಾಜ ಬಾಂಧವರಿಂದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೂಡಾ ಅಧ್ಯಕ್ಷ ಹಾಗೂ ಕುರುಬ ಸಮಾಜದ ಮುಖಂಡ ರಾಜನಹಳ್ಳಿ ಶಿವಕುಮಾರ್, ಸಮಾವೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭ ನಡೆಯಲಿದೆ. ಈ ಸಮಾರಂಭಕ್ಕೆ ಸಮಾಜದ ಮುಖಂಡರು, ಹಿರಿಯರು, ಯುವಕರು ಸ್ವಯಂ ಪ್ರೇರಣೆಯಿಂದ ಆಗಮಿಸಿ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ ಎಂದರು.
ರಾಜ್ಯದಲ್ಲಿ ಶೈಕ್ಷಣಿಕವಾಗಿ,ಆರ್ಥಿಕವಾಗಿ ಹಿಂದುಳಿದ ಸಮಾಜ ಕುರುಬ ಸಮಾಜವಾಗಿದೆ. ಗ್ರಾಮೀಣಭಾಗದಲ್ಲಿ ಇಂದಿಗೂ ಸಮಾಜ ಬಾಂಧವರು ಹಿಂದುಳಿದಿದ್ದಾರೆ. ಹಳ್ಳಿಗಳಲ್ಲಿ ಇಂದಿಗೂ ಸಮಾಜಬಾಂಧವರು ಕುರಿಗಳನ್ನು ಕಾಯುತ್ತಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ.ಅವರೆಲ್ಲರೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ಕುರುಬ ಸಮಾಜದ ಬುಡಕಟ್ಟು ಭಾಗದಲ್ಲಿ ಜೀವನ ಇಂದಿಗೂ ಕಠಿಣವಾಗಿದೆ. ಅವರಿಗೆ ಸೂಕ್ತ ನೆಲೆ ಕಲ್ಪಿಸಬೇಕಿದೆ ಅದಕ್ಕಾಗಿ ಸರ್ಕಾರ ಮೀಸಲಾತಿ ನೀಡುವುದು ಅವಶ್ಯವಾಗಿದೆ ಎಂದು ತಿಳಿಸಿದರು.
ಮೂರು ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸ ಬೇಕೆಂದು ಮನವಿ ಮಾಡಿದರು. ಈ ವೇಳೆ ಮುಖಂಡರಾದ ಬಿಎಂ ಸತೀಶ್, ಜಿ.ಪಂ ಸದಸ್ಯರಾದ ಹದಡಿ ನಿಂಗಪ್ಪ, ಜಯಶೀಲ, ಮಾಜಿ ಕಾರ್ಪೋರೇಟರ್ ತಿಪ್ಪಣ್ಣ, ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಗಣೇಶಪ್ಪ, ಜೆಸಿ ದೇವರಾಜ್, ವೀರಣ್ಣ ಇದ್ದರು.



