ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣೆಯ ಪಿಎಸ್ಐ ಪ್ರಭು ಕೆಳಗಿನಮನೆ ಅವರ ಕಾರು ಇತ್ತೀಚೆಗೆ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿತ್ತು.
ಪಿಎಸ್ಐ ಪ್ರಭು ಕೆಳಗಿನಮನೆ ಅವರು ತಮ್ಮ ಸ್ವಗ್ರಾಮಕ್ಕೆ ಕಾರಿನಲ್ಲಿ ತೆರಳುವ ವೇಳೆ ರಸ್ತೆಯಲ್ಲಿ ಪಕ್ಷಿ ಅಡ್ಡ ಬಂದಿದೆ. ಆ ಪಕ್ಷಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ವೇಗದ ರಭಸಕ್ಕೆ ಕಾರು ಎರಡು ಬಾರಿ ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಪಿಎಸ್ಐ ಪ್ರಭು ಕೆಳಗಿನಮನೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೀಟ್ ಬೆಲ್ಟ್ ಧರಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.



