ದಾವಣಗೆರೆ: ದೇಶದಲ್ಲಿ ಅನ್ನವನ್ನು ಸೃಷ್ಟಿ ಮಾಡುವ ಶಕ್ತಿ ರೈತರಿಗೆ ಮಾತ್ರ ಇದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಸಾಲಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ರಸಗೊಬ್ಬರಗಳಿಗೆ ಸಹಾಯಧನ ಒದಗಿಸುತ್ತಿದೆ. 53 ಲಕ್ಷ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಕೃಷಿ ಪದ್ಧತಿಯಲ್ಲಿ ಸಮಗ್ರ ಬದಲಾವಣೆ ತರಬೇಕು ಎನ್ನುವ ಉದ್ದೇಶ ಹೊಂದಲಾಗಿದೆ. ರೈತರು ಸಮಗ್ರ ಕೃಷಿ ನೀತಿ ಅಳವಡಿಸಿಕೊಳ್ಳಬೇಕು, ಬಿತ್ತನೆ ಮಾಡುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಭೂಮಿಗೆ ಬೇಕಾದ ಅಗತ್ಯ ಪೆÇೀಷಕಾಂಶ ಮತ್ತು ಲವಣಾಂಶಗಳನ್ನು ಒದಗಿಸುವ ಕೆಲಸ ಮಾಡಿದಾಗ ಮಾತ್ರ ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ಜಾರಿ ಮಾಡಲಾಗಿದೆ. ರೈತ ವಿದ್ಯಾನಿಧಿ ಯೋಜನೆ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಜಾರಿಗೊಳಿಸಲಾಗಿದೆ. ವಿಶೇಷವಾಗಿ ಎಲ್ಲಾ ವರ್ಗದ ರೈತರ ಹೆಣ್ಣುಮಕ್ಕಳಿಗೆ ರೂ.2000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಬಿತ್ತನೆ ಸಮಯದಲ್ಲಿ ಭೂಮಿಯನ್ನು ಉಳುಮೆ ಮಾಡಲು ಪ್ರತಿ ಒಂದು ಎಕರೆಗೆ ಲೀಟರ್ ಗೆ 25.ರೂ ನಂತೆ ಗರಿಷ್ಠ 10 ಲೀಟರ್ ವರೆಗೆ 250.ರೂ ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ, ಹನಿ ನೀರಾವರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತಿದೆ ಒಟ್ಟಾರೆ ರೈತರನ್ನು ಸಬಲೀಕರಣಗೊಳಿಸಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನ ಮೂರ್ತಿ, ಮಾಜಿ ಶಾಸಕ ಬಸವರಾಜ್ ನಾಯಕ್, ಶಿವಮೊಗ್ಗ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಅಜಗಣ್ಣ, ಸುರೇಶ್, ಸಿದ್ದರಾಮ ರೆಡ್ಡಿ, ಸುನಂದಮ್ಮ ಓ.ಶಿವಲಿಂಗಪ್ಪ, ಗ್ರಾಪಂ ಅಧ್ಯಕ್ಷೆ ಜಮೀಲಾ ಬಾನು ಸಮೀವುಲ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಸೇರಿದಂತೆ ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.



