ದಾವಣಗೆರೆ: ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವಿನಾಕಾರಣ ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ 12 ವರ್ಷಗಳಿಂದಲೂ ದಾವಣಗೆರೆ ಸರಸ್ವತಿ ನಗರ “ಬಿ” ಬ್ಲಾಕ್ನ ನಮ್ಮ ಸ್ವಂತ ಮನೆಯಲ್ಲಿ ವಾಸವಾಗಿದ್ದೇನೆ. ಕಳೆದ 10 ವರ್ಷಗಳಲ್ಲಿ ನಡೆದ ಲೋಕಸಭೆ, ವಿಧಾನಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗೆ ಮಂಜುನಾಥ ಕಾಲೇಜಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದೇನೆ. ಆದರೆ ಈಗ ಏಕಾಏಕಿ ಪಟ್ಟಿಯಿಂದ ಕೈ ಬಿಟ್ಟಿರುವುದು ಏಕೆ ಎನ್ನುವುದು ಅರ್ಥವಾಗುತ್ತಿಲ್ಲ. ನನ್ನ ಪತ್ನಿ, ಮಕ್ಕಳ ಹೆಸರು ಇದೆ. ನನ್ನೊಬ್ಬನ ಹೆಸರನ್ನು ಮಾತ್ರ ತೆಗೆದುಹಾಕಿರುವುದು ಆಶ್ಚರ್ಯಕರವಾಗಿದೆ.
ಇದು ಒಬ್ಬ ಅರ್ಹ ಮತದಾರನ ಸಾಂವಿಧಾನಿಕ ಮತದಾನದ ಹಕ್ಕನ್ನು ಕಸಿದುಕೊಂಡಂತಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಗಾರರಾಗಿದ್ದಾರೆ. ಸಂವಿಧಾನ ನೀಡಿದ ಹಕ್ಕನ್ನು ಅಧಿಕಾರಿಗಳ ಬೇಜವಾಬ್ದಾರಿಯಿಂದ ಕಸಿದುಕೊಂಡಂತಾಗಿದೆ ಎಂದು ಕೆ.ರಾಘವೇಂದ್ರ ನಾಯರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.