ದಾವಣಗೆರೆ: ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿ ಅವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 3 ಸಾವಿರ ರೂ, 2 ಸಾವಿರ ರೂ. ಹಾಗೂ 1 ಸಾವಿರ ರೂ. ಪ್ರಥಮ, ದ್ವಿತೀಯ, ತೃತೀಯ ಬಹುಮಾನವಾಗಿ ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 31 ಸಾವಿರ ರೂ, 21 ಸಾವಿರ ರೂ. ಹಾಗೂ 11 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.
ಆಯ್ದ ವಿಷಯಗಳು; ಪ್ರೌಢಶಾಲಾ ವಿಭಾಗ :- 1) ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ. 2) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. 3) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ :- 1) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು. 2) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ. 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- 1) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು. 2) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. 4) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತಾವು ರಚಿಸಿದ ಪ್ರಬಂಧಗಳನ್ನು ತಮ್ಮ ಸಂಸ್ಥೆಗಳ ಮುಖ್ಯಸ್ಥರಿಗೆ ಗುರುತಿನ ಚೀಟಿ ಹಾಗೂ ಸಂಪರ್ಕ ವಿವರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಪ್ರತಿ ಶಾಲೆ / ಕಾಲೇಜು / ಸ್ನಾತಕೋತ್ತರ ಪದವಿ ವಿಭಾಗಗಳ ಮುಖ್ಯಸ್ಥರು ತಮ್ಮ ಸಂಸ್ಥೆಯಲ್ಲಿನ ಆಯ್ದ ಅತ್ಯುತ್ತಮವಾದ ಮೂರು ಪ್ರಬಂಧಗಳನ್ನು ಸೆಪ್ಟೆಂಬರ್ 26 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸು ಬಡಾವಣೆ, ದಾವಣಗೆಗೆ ಇಲ್ಲಿಗೆ ಕಳುಹಿಸಬೇಕು.
ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮವೆನಿಸಿದ ಪ್ರತಿ ವಿಭಾಗದಲ್ಲಿನ ಮೂರು (3) ಪ್ರಬಂಧಗಳನ್ನು ಆಯ್ಕೆ ಮಾಡಿ 29-09-2023 ರೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು, ಇವರಿಗೆ ಸಲ್ಲಿಸಲಾಗುತ್ತದೆ. ಅವುಗಳಲ್ಲಿ ಅತ್ಯುತ್ತಮವಾದ ಪ್ರಬಂಧಗಳಿಗೆ ರಾಜ್ಯಮಟ್ಟದಲ್ಲಿ ಬಹುಮಾನ ನೀಡಲಾಗುವುದು.
ಪ್ರಬಂಧ ರಚಿಸಲು ಮಾರ್ಗಸೂಚಿಗಳು : ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಪ್ರಬಂಧವು ಕನ್ನಡದಲ್ಲಿ ಶುದ್ಧ ಕೈಬರಹ ಅಥವಾ ನುಡಿ ಇಲ್ಲವೇ ಯೂನಿಕೋಡ್ ತಂತ್ರಾಂಶದಲ್ಲಿ ಬೆರಳಚ್ಚು ಮಾಡಿರಬೇಕು. ಆಕರವಾಗಿ ಬಳಸಿದ ಪರಾಮರ್ಶನ, ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಶಾಲೆ, ಕಾಲೇಜುಗಳ ಮುಖ್ಯಸ್ಥರುಗಳ ಮೂಲಕವೇ ಜಿಲ್ಲಾ ವಾರ್ತಾಧಿಕಾರಿಗಳಿಗೆ ಪ್ರಬಂಧಗಳನ್ನು ತಲುಪಿಸಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ. ಹೆಚ್ಚಿನ ಮಾಹಿತಿಗೆ 08192-254892 ಗೆ ಕರೆ ಮಾಡಬಹುದಾಗಿದೆ ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ತಿಳಿಸಿದ್ದಾರೆ.