Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ: ಶೀಘ್ರ ಸಭೆ ಕರೆದು ನೀರು ಬಿಡುಗಡೆ ದಿನಾಂಕ ನಿಗದಿ; ಡಿಸಿಎಂ ಡಿ.ಕೆ.ಶಿವಕುಮಾರ್

ದಾವಣಗೆರೆ

ಭದ್ರಾ ಜಲಾಶಯ: ಶೀಘ್ರ ಸಭೆ ಕರೆದು ನೀರು ಬಿಡುಗಡೆ ದಿನಾಂಕ ನಿಗದಿ; ಡಿಸಿಎಂ ಡಿ.ಕೆ.ಶಿವಕುಮಾರ್

ದಾವಣಗೆರೆ: ಈ ಸಲ ಉತ್ತಮ ಮುಂಗಾರು ಮಳೆ ಆಗುತ್ತಿದ್ದು, ತುಂಗಾ ಮತ್ತು ಭದ್ರಾ ಜಲಾಶಯ ತುಂಬುತ್ತಿರುವುದು ಆಶಾದಾಯಕ ಸಂಗತಿಯಾಗಿದೆ. ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಶೀಘ್ರವೇ ಕರೆದು, ಕರೆದು, ಮಳೆಗಾಲದ ಬೆಳೆಗೆ ನೀರು ಬಿಡುಗಡೆಗೆ ದಿನಾಂಕ ನಿಗದಿಪಡಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಡಿಸಿಎಂ ಡಿ.ಕೆ.ಶಿವಕುಮಾರ ಅಧ್ಯಕ್ಷತೆಯಲ್ಲಿ ಭದ್ರಾ ಮತ್ತು ತುಂಗಭದ್ರಾ ಅಚ್ಚು ಪ್ರದೇಶದ ವ್ಯಾಪ್ತಿ ಶಾಸಕರ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೇತೃತ್ವದಲ್ಲಿ ಜಿಲ್ಲೆ ಏತ ನೀರಾವರಿ ಯೋಜನೆಗಳ ಕುರಿತಂತೆ ಚರ್ಚಿಸಲಾಯಿತು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ಕಳಪೆ ಕಾಮಗಾರಿಯಿಂದಾಗಿ ಕೆರೆಗಳಿಗೆ ನೀರು ತಲುಪುತ್ತಿಲ್ಲ. ಈ ಹಿನ್ನೆಲೆ ತುಂಗಭದ್ರಾ ನದಿಯಿಂದ 22 ಕೆರೆಗಳ ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ಹೊಸದಾಗಿ ಪೈಪ್ ಲೈನ್ ಕಾಮಗಾರಿ ಕೈಗೊಂಡು, ರೈತರಿಗೆ ನೆರವಾಗಬೇಕು. ಇದಕ್ಕೆ ಅಗತ್ಯ ಅನುದಾನವನ್ನೂ ಬಿಡುಗಡೆ ಮಾಡಬೇಕು. ಭದ್ರಾ ಡ್ಯಾಂನಿಂದ ಮಳೆಗಾಲದ ಬೆಳೆಗೆ ತಕ್ಷಣವೇ ನಾಲೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂಗೆ ಆಗ್ರಹಿಸಿದರು. ಸಂಬಂಧಿಸಿದ ಅಧಿಕಾರಿಗಳು ಯೋಜನೆಗೆ ಸಂಬಂಧಿಸಿದಂತೆ ಹೊಸ ಕಾಮಗಾರಿ ಕೈಗೊಳ್ಳಲು ನೀಲಿ ನಕ್ಷೆ ಹಾಗೂ ಯೋಜನಾ ವೆಚ್ಚ ತಯಾರಿಸಲು ಕ್ರಮ ಕೈಗೊಳ್ಳಿ ಡಿಸಿಎಂ ಸೂಚಿಸಿದರು.

ತುಂಗಭದ್ರಾ ನದಿಯಿಂದ ದಾವಣಗೆರೆ ಜಿಲ್ಲೆಯ 22 ಕೆರೆಗಳಿಗೆ ನೀರುಣಿಸುವ ಏತ ನೀರಾವರಿ ಯೋಜನೆಯು ವಿಫಲವಾಗಿದ್ದು, ಕೆರೆಗಳಿಗೆ ನೀರು ಬರದ ಹಿನ್ನೆಲೆ ಹೊಸದಾಗಿ ಪೈಪ್‌ಲೈನ್ ಕಾಮಗಾರಿ ಕೈಗೊಂಡು, ಕೆರೆಗಳಿಗೆ ನೀರುಣಿಸುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಒತ್ತಾಯಿಸಿದರು.

ಎಲ್ ಆ್ಯಂಡ್‌ ಟಿ ಕಂಪನಿ ಕಳಪೆ ಕಾಮಗಾರಿಯಿಂದಾಗಿ ತುಂಗಭದ್ರಾ ನದಿಯಿಂದ ಜಿಲ್ಲೆ 22 ಕೆರೆಗಳಿಗೆ ನೀರುಣಿಸುವ ಏತ ನೀರಾವರಿ ಯೋಜನೆ ವಿಫಲವಾಗಿದೆ. ಕಳಪೆ ಪೈಪ್‌ಲೈನ್ ಕಾಮಗಾರಿ ಕೈಗೊಂಡ ಎಲ್ ಆ್ಯಂಡ್ ಟಿ ಕಂಪನಿ ಅಸಡ್ಡೆಯಿಂದಾಗಿ ಇಂದು 22 ಕೆರೆಗಳ ವ್ಯಾಪ್ತಿ ರೈತರಿಗೆ ಸಂಕಷ್ಟ ಬಂದೊದಗಿದೆ. ಕೆರೆಗಳಿಗೆ ನೀರು ಸಹ ತುಂಬುತ್ತಿಲ್ಲ. ತಕ್ಷಣವೇ ನದಿಯಿಂದ ಕೆರೆಗಳವರೆಗೆ ಹೊಸದಾಗಿ ಪೈಪ್ ಲೈನ್ ಅಳವಡಿಸುವ ಕಾಮಗಾರಿ ಕೈಗೊಂಡು, ರೈತರಿಗೆ ಅನುಕೂಲ ಮಾಡಿಕೊಡಬೇಕು. ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯಸ್ವಾಮೀಜಿಗಳ ಕನಸಿನ ಯೋಜನೆಯಾಗಿದೆ. ಈ ಯೋಜನೆ ಕಾಮಗಾರಿಯನ್ನು ಪ್ರತಿಷ್ಟಿತ ಎಲ್ ಆ್ಯಂಡ್ ಟಿ ಕಂಪನಿಗೆ ಟೆಂಡರ್ ನೀಡಲಾಗಿತ್ತು ಎಂದು ತಿಳಿಸಿದರು.

ಪ್ರತಿಷ್ಟಿತ ಕಂಪನಿಯಾಗಿದ್ದರೂ ಕಾಮಗಾರಿ ಕಳಪೆ ಮಾಡಲಾಗಿದೆ. ಕಳೆದ ವರ್ಷದ ಭೀಕರ ಬರದಿಂದಾಗಿ ರೈತರು ಅಡಕೆ ತೋಟ ಉಳಿಸಿಕೊಳ್ಳಲು ಹರಸಾಹಸಪಡಬೇಕಾಯಿತು. ಕುಡಿವ ನೀರಿಗೂ ನಗರ, ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ಹಾಹಾಕಾರ ಉಂಟಾಗಿತ್ತು. ಹಾಗಾಗಿ ನೀರಾವರಿ ನಿಗಮದಲ್ಲಿ ಉಳಿದಿರುವ ₹18 ಕೋಟಿ ಜೊತೆಗೆ ಹೆಚ್ಚುವರಿ ₹50 ಕೋಟಿ ಅನುದಾನ ನೀಡಿ, 22 ಕೆರೆಗಳ ಯೋಜನೆ ವ್ಯಾಪ್ತಿಯಲ್ಲಿ ಹೊಸದಾಗಿ ಪೈಪ್‌ ಲೈನ್ ಅಳವಡಿಸಿ, ಕೆರೆ ತುಂಬಿಸಿ, ಅನುಕೂಲ ಮಾಡಿಕೊಡಬೇಕು ಎಂದು ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಇತರರು ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top