ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಬೃಹತ್ ಮೆರವಣಿಗೆ ಮೂಲಕ ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಬಿಜೆಪಿ ಶಕ್ತಿ ಪ್ರದರ್ಶನ
ನಾಮಪತ್ರ ಸಲ್ಲಿಕೆ ಬಳಿಕ ನಗರ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ರೋಡ್ ಶೋ ಮಾಡಲಾಯಿತು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಬೃಹತ್ ರೋಡ್ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಾಯಿತು. ಮೆರವಣಿಗೆಯಲ್ಲಿ ಬಿಜೆಪಿ ಜನಪ್ರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ , ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿ ಹಲವರು ಭಾಗಿಯಾಗಿದ್ದರು.
ನಗರದ ಪ್ರಮುಖ ರಸ್ತೆಗಳಲ್ಲಿ ಕೇಸರಿ ಧ್ವಜಗಳು, ಟೋಪಿಗಳು ಮತ್ತು ಜಯಘೋಷಗಳ ನಡುವೆ ಇಡೀ ನಗರವೇ ಕೇಸರಿ ಮಯವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಗಮನವು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿತ್ತು. ತೆರೆದ ವಾಹನದಲ್ಲಿ ಸಾಗಿದ ನಾಯಕರು ಹಸ್ತಲಾಘವ ಮಾಡುತ್ತಾ ಜನಸಾಗರಕ್ಕೆ ಅಭಿನಂದನೆ ಸಲ್ಲಿಸಿದರು.

ವೈಮನಸು ಮರೆತ ನಾಯಕರು; ಒಗ್ಗಟ್ಟು ಪ್ರದರ್ಶನ
ಜಿಲ್ಲಾ ಬಿಜೆಪಿ ಹಾಗೂ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಮರೆತ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಒಗ್ಗಟ್ಟು ಪ್ರದರ್ಶನ ಮಾಡುದರು.ಅದರಲ್ಲೂ ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕೈಜೋಡಿಸಿ ನಿಂತ ಉಭಯ ನಾಯಕರು, ವೈಯಕ್ತಿಕ ಭಿನ್ನಾಭಿಪ್ರಾಯಕ್ಕಿಂತ ಪಕ್ಷದ ಗೆಲುವೇ ಮುಖ್ಯ ಎಂಬ ಸಂದೇಶ ಸಾರಿದರು.
ದಾವಣಗೆರೆ ದಕ್ಷಿಣದಲ್ಲಿ ಈ ಬಾರಿ ಕಮಲ ಅರಳಲಿದೆ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ಜನರಿಗೆ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ. ದಾವಣಗೆರೆ ದಕ್ಷಿಣದಲ್ಲಿ ಈ ಬಾರಿ ಕಮಲ ಅರಳಲಿದೆ. ಈ ಬೃಹತ್ ಜನಸ್ತೋಮವೇ ಇದಕ್ಜೆ ಸಾಕ್ಷಿ. ಗೆಲುವಿಗೆ ಇನ್ನು ಕಾಲಗಣನೆ ಮಾತ್ರ ಬಾಕಿ ಎಂದರು.
ಒಂದಂತೂ ನಿಶ್ಚಿತ, ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗ್ತಿದೆ. ಅಭಿವೃದ್ಧಿ ಕುಂಠಿತವಾಗಿದೆ. ನಮ್ಮ ಅಭ್ಯರ್ಥಿ ಜೊತೆ ನಾಮಪತ್ರ ಸಲ್ಲಿಸಿ ಬಂದಿದ್ದೇವೆ. ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ತಾರೆ ಎಂಬ ವಿಶ್ವಾಸ ನಮಗಿದೆ.
ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ. ತಕ್ಕ ಉತ್ತರ ಕೊಡುವ ಅವಕಾಶ ಜನರಿಗೆ ಸಿಕ್ಕಿದೆ ಎಂದರು.

ದಾವಣಗೆರೆ ದಕ್ಷಿಣದಲ್ಲಿ ಬದಲಾವಣೆ ಖಚಿತ
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಮಾತನಾಡಿ, “ಈ ಸಲ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ಖಚಿತ. ಹಮಾಲಿಯೊಬ್ಬರ ಮಗ ರಾಜ್ಯ ವಿಧಾನಸಭೆಗೆ ಪ್ರವೇಶ ಮಾಡೋದು ಖಚಿತ. ಈ ಬಾರಿ ಬಿಜೆಪಿ ಗೆಲ್ಲಲುವ ಭರವಸೆ ಇದೆ ಎಂದರು.
ದಾವಣಗೆರೆ: ಬಿಜೆಪಿ ಅಭ್ಯರ್ಥಿಗೆ ವಿನಯ್ಕುಮಾರ್ ಬೆಂಬಲ ಘೋಷಣೆ; ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಅಂತ್ಯಕ್ಕೆ ಪಣ
ಈ ವೇಳೆ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್ ಶಿವಶಂಕರ್, ಎಸ್. ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, , ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಮತ್ತು ಪ್ರಮುಖರು ಭಾಗವಹಿಸಿದ್ದರು. ಬಿಜೆಪಿ ಅಭ್ಯರ್ಥಿಗೆ ಜಿ.ಬಿ.ವಿನಯ್ಕುಮಾರ್ ಬೆಂಬಲ ನೀಡಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.



