ದಾವಣಗೆರೆ: ಜಿಲ್ಲಾ ರೈತರ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಕಾಮಗಾರಿ ವಿರೀಧಿಸಿ ಬಿಜೆಪಿ, ರೈತ ನಾಯಕರು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ- 48 ತಡೆದು ಪ್ರತಿಭಟನೆ ನಡೆಸಿದರು.
ಭಾರೀ ಪ್ರಮಾಣದಲ್ಲಿ ಸೇರಿದ್ದ ಪ್ರತಿಭಟನಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅರ್ಧ ಗಂಟೆಗೂ ಹೆಚ್ಚು ಹೊತ್ತು ಧರಣಿ ನಡೆಸಿದ್ದರಿಂದ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿತ್ತು. ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರತಿಭಟನೆ ನಿರತರನ್ನುವ ಪೊಲೀಸರು ಬಂಧಿಸಲು ಮುಂದಾಗ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನಾ ನಿರತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಭದ್ರಾ ನೀರು ನಮ್ಮ ಹಕ್ಕು, ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸಬೇಕುವಎಂದು ಘೋಷಣೆ ಕೂಗಿದರು.
ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದಕ್ಕೆ ಪೊಲೀಸರು ಎಲ್ಲರನ್ನೂ ಬಂಧಿಸಿದರು. ರೈತರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಬಂಧಿಸಿದ್ದು, ಸರ್ಕಾರ ಪೊಲೀಸರನ್ಬು ದುರ್ಬಳಕೆ ಮಾಡಿಕೊಂಡಿದೆ. ಯಾವುದೇ ಕಾರಕ್ಕೂ ನಾಲೆ ಸೀಳಿ ಭದ್ರಾ ನೀರು ಪೂರೈಕೆ ಮಾಡಲು ಅಚ್ಚುಕಟ್ಟು ಪ್ರದೇಶದ ರೈತರು ಅವಕಾಶ ನೀಡುವುದಿಲ್ಲ. ಅವೈಜ್ಞಾನಿಕ ಕಾಮಗಾರಿಗೆ ಅನುಮತಿಕೊಟ್ಟ ಸರ್ಕಾರ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವಯದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.
ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಮೇಯರ್ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಜಿಲ್ಲಾ ರೈತ ಒಕ್ಕೂಟದ ಮುಖಂಡ ಕೋಳೆನಹಳ್ಳಿ ಬಿ.ಎಂ. ಸತೀಶ್,, ಧನಂಜಯ ಕಡ್ಲೇಬಾಳು ಸೇರಿ ದಾವಣಗೆರೆ, ಹರಿಹರ ಭಾಗದ ರೈತರು ಭಾಗಿಯಾಗಿದ್ದರು.



