ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಸೂಚನೆ ನೀಡಿದರು. ಸೆಪ್ಟೆಂಬರ್ 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಎ.ವಿ.ಕಮಲಮ್ಮ ಪಿಯು ಕಾಲೇಜು ಕೇಂದ್ರದಲ್ಲಿ 552, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು 553, ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು 552 ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 552 ಅಭ್ಯರ್ಥಿಗಳು ಸೇರಿ ಒಟ್ಟು 2209 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.
ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ.
ಕೆಇಎ ಯಿಂದ ಇತರೆ ಜಿಲ್ಲೆಗಳಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ ಎಂದ ಅವರು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಮೂಲಕ ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
144 ಸೆಕ್ಷನ್ ಜಾರಿ; ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಅಲ್ಲಿ ಯಾವುದೇ ಜೆರಾಕ್ಸ್ ಅಂಗಡಿ, ಇಂಟರ್ನೆಟ್ ಸೆಂಟರ್ಗಳನ್ನು ತೆರೆಯುವಂತಿಲ್ಲ.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.



