ದಾವಣಗೆರೆ: ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲ್ಲೂಕಿನ ಅಣಜಿಗೆರೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಐದಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೋಗುವಾಗ ದಾರಿ ಮಧ್ಯೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ.
ಗಾಯಗೊಂಡವರನ್ನು ಅರಸಿಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಸಿಕೆರೆ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.



