ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.20 ಮತ್ತು 22 ರ ಉಪ ಚುನಾವಣೆ ಹಾಗೂ ವಿವಿಧ ಗ್ರಾಮ ಪಂಚಾಯತ್ಗಳಿಗೆ ಮಾ. 29 ರಂದು ಮತದಾನ ನಡೆಯಲಿದ್ದು, ಮತದಾನ ವ್ಯಾಪ್ತಿಯ ಕ್ಷೇತ್ರಗಳ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ.
ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.20 ಮತ್ತು 22 ರ ಉಪ ಚುನಾವಣೆ ದಾವಣಗೆರೆ ತಾಲ್ಲೂಕಿನ ಬೇತೂರು, ಕನಗೊಂಡನಹಳ್ಳಿ ಮತ್ತು ಕುಕ್ಕವಾಡ, ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ, ಸುಂಕದಕಟ್ಟೆ ಕ್ಷೇತ್ರದ ಉಪ ಚುನಾವಣೆ-2021ರ ಸಂಬಂಧ ಮತದಾನ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಸ್ಥಾಪಿತ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾಗುವಂತೆ ಮಾ.29 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿರುತ್ತದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಇಲಾಖೆಯ ಮುಖ್ಯಸ್ಥರು ವ್ಯವಸ್ಥೆ ಮಾಡಬೇಕು. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



