ದಾವಣಗೆರೆ: ಲಾಕಪ್ಡೆತ್ ಎಂದು ಆರೋಪಿಸಿ ಮೃತ ಅದಿಲ್ ಸಂಬಂಧಿ ಕಡೆಯ ಉದ್ರಿಕ್ತರಿಂದ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. 11 ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು,10ಕ್ಕೂ ಹೆಚ್ಚು ಪೊಲೀಸ್ ವ್ಯಾನ್ಗಳು ಜಖಂಗೊಂಡಿವೆ.
ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ,ಒಸಿ (ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಆದಿಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಆದಿಲ್ ಠಾಣೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಆದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಆದಿಲ್ ಠಾಣೆಯಲ್ಲಿ ಕುಸಿದು ಬಿದ್ದ ನಂತರ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇರಲಿಲ್ಲ.ಆದರೂ ಮೃತನ ಸಂಬಂಧಿಕರು ಲಾಕಪ್ಡೆತ್ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಕೂಡ ಸಿಸಿಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ. ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ. ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.



