ದಾವಣಗೆರೆ: ಜಿಲ್ಲೆಯ ಚನ್ನಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು(ನ.29) ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 50ಕ್ಕೂ ಹೆಚ್ಚು ಕಂಪನಿಗಳು ಮತ್ತು 6 ಸಾವಿರಕ್ಕೂ ಹೆಚ್ಚು ಉದ್ಯೋಗವಕಾಶಗಳು ದೊರೆಯಲಿವೆ ಎಂದು ಚಾರಿಟಿ ಫೌಂಡೇಶನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆದಿದ್ದು, 4000ಕ್ಕೂ ಅಧಿಕ ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು, ಇನ್ನು ಹೆಚ್ಚಿನ ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕೆಂದು ಕೋರಿದರು. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ ವಿದ್ಯಾರ್ಥಿಗಳಿಗೆ ಹಲವು ಪ್ರತಿಷ್ಠಿತ ಕಂಪನಿಗಳಿಂದ ಉದ್ಯೋಗವಕಾಶಗಳು ಲಭ್ಯವಿದ್ದು, 15 ಸಾವಿರದಿಂದ 35 ಸಾವಿರದವರೆಗೆ ತಿಂಗಳ ಪ್ಯಾಕೇಜ್ ನೀಡಲು ಮುಂದಾಗಿವೆ.
ಬುಧವಾರದಂದು ಚನ್ನಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಮಾನ್ಯ ಲೋಕಸಭಾ ಸದಸ್ಯರಾದ ಡಾ ಜಿ ಎಮ್ ಸಿದ್ದೇಶ್ವರ ಚಾಲನೆ ನೀಡಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ ಭೀಮಸಮುದ್ರ ಇದರ ಅಧ್ಯಕ್ಷ ಜಿಎಂ ಪ್ರಸನ್ನ ಕುಮಾರ್, ಟ್ರಸ್ಟ್ ನ ಕಾರ್ಯದರ್ಶಿಗಳು ಮತ್ತು ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿಎಂ ಲಿಂಗರಾಜು, ಟ್ರಸ್ಟ್ ನ ಖಜಾಂಚಿಗಳು ಮತ್ತು ಬಿಜೆಪಿ ಯುವ ಮುಖಂಡ ಜಿ ಎಸ್ ಅನಿತ್ ಕುಮಾರ್, ವಿವಿಧ ಮುಖಂಡರಗಳು ಭಾಗವಹಿಸಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಬೆಳಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಸಂದರ್ಶನ ಪ್ರಕ್ರಿಯೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ, ಭಾವಚಿತ್ರ, ಬಯೋಡೇಟಾ ಮತ್ತು ಕನಿಷ್ಠ ಐದು ಪ್ರತಿಗಳನ್ನು ತೆಗೆದುಕೊಂಡು ಬರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಆಯ್ಕೆ ಪತ್ರವನ್ನು ನೀಡಲು ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ಕೊಟ್ಟರು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು. https://forms.gle/BN5KqYfovodCXzAQ8.
ಮಾಜಿ ಲೋಕಸಭಾ ಸದಸ್ಯ ಜಿ ಮಲ್ಲಿಕಾರ್ಜುನಪ್ಪ 20ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಜಿ ಎಂ ಎಚ್ ಚಾರಿಟಿ ಫೌಂಡೇಶನ್ ವತಿಯಿಂದ ನಡೆಸುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಚಾರಿಟಿ ಫೌಂಡೇಶನ್ ಸದಸ್ಯ ಪ್ರಭುದೇವ್ ತಿಳಿಸಿದರು.



