ದಾವಣಗೆರೆ: ಜಿಲ್ಕೆಯ ಚನ್ಬಗಿರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ನಿಯಮ ಮೀರಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿರುವ ಮಾಡಾಳ್ ಮಲ್ಲಿಕಾರ್ಜುನ್ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ. ಮಲ್ಲಿಕಾರ್ಜುನ್ ಚನ್ನಗಿರಿ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರರಾಗಿದ್ದಾರೆ. ಇನ್ನೊಬ್ಬ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಹಿನ್ನೆಲೆ ಬಿಜೆಪಿ ಪಕ್ಷದಿಂದ ಮಾಡಾಳ್ ಕುಟುಂಬಕ್ಕೆ ಟಿಕೆಟ್ ಕೈ ತಪ್ಪಿತ್ತು.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ , ಚನ್ನಗಿರಿ ಕ್ಷೇತ್ರದಿಂದ 15 ಆಕಾಂಕ್ಷಿಗಳಿದ್ದರೂ ಬಂಡಾಯ ಅಭ್ಯರ್ಥಿಯಾಗಿ ಯಾರು ನಾಮಪತ್ರ ಸಲ್ಲಿಕೆ ಮಾಡಿಲ್ಲ. ಆದರೆ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರು ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರನ್ನು ಆರು ವರ್ಷಗಳ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದರು.
ನಮ್ಮ ಪಕ್ಣದಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷದ ಚಿಹ್ನೆ ಮುಖ್ಯ. ಬಂಡಾಯ ಎದ್ದವರೂ ಎಷ್ಟೇ ದೊಡ್ಡ ವ್ಯಕ್ತಿಯೇ ಇರಲಿ, ಪಕ್ಷ ಸಹಿಸುವುದಿಲ್ಲ. ಯಾರಿಗೆ ಟಿಕೆಟ್ ಸಿಕ್ಕಿದೆಯೋ ಅವರನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಕರ್ತವ್ಯ. ಚನ್ನಗಿರಿಯಲ್ಲಿ ಹೆಚ್.ಎಸ್.ಶಿವಕುಮಾರ್ ಅವರಿಗೆ ಟಿಕೆಟ್ ನೀಡಿದೆ. ಇಲ್ಲಿನ ವಾತಾವರಣ ಶಿವಕುಮಾರ್ ಗೆಲುವಿಗೆ ಪೂರಕವಾಗಿದೆ ಎಂದು ತಿಳಿಸಿದರು.
ಏಪ್ರಿಲ್ 16 ರಂದು ಮಾಡಾಳ್ ಮಲ್ಲಿಕಾರ್ಜುನ್ ಅವರು ಸಾವಿರಾರು ಜನ ಸೇರಿಸಿ ಸ್ವಾಭಿಮಾನಿ ಸಭೆ ನಡೆಸುವ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ತಿಳಿಸಿದ್ದರು.



