ದಾವಣಗೆರೆ: ಈ ಬಾರಿ ತೀವ್ರ ಬರಗಾಲ ಎದುರಾಗಿದೆ, ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಾಗಿ ಬರಗಾಲ ಉದ್ಭವಿಸಿದೆ. ಬರುವ ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಿ, ಸಮರ್ಪಕ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಂಡು ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 5 ರಂದು ಬೆಂಗಳೂರಿನಿಂದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ತಿಳಿಸಿದರು.
ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳುಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ. ಪೂರ್ವ ಮುಂಗಾರು ಮಳೆಯನ್ನು ಕೆಲವೆಡೆ ನಿರೀಕ್ಷಿಸಲಾಗಿದೆ.ಆದಾಗ್ಯೂ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಸಿಇಓ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಯೋಜನೆ ರೂಪಿಸಬೇಕು.ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿನ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಲಿದೆ.
ಎಲ್ಲಾ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ರೂ.855 ಕೋಟಿ ಬರನಿರ್ವಹಣೆಯ ಅನುದಾನ ಲಬ್ಯವಿದ್ದು ಇದರೊಂದಿಗೆ ಪ್ರತಿ ಜಿಲ್ಲೆಗೆ ರೂ.2 ಕೋಟಿ ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.
ನರೇಗಾ ಉದ್ಯೋಗ ದಿನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಬರಗಾಲ ಸಂದರ್ಭದಲ್ಲಿ ನರೇಗಾದಡಿ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬರಗಾಲ ಇರುವುದರಿಂದ ಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬಹುದು. ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ತಾಲ್ಲೂಕು ಮಟ್ಟದ ಟಾಸ್ಕ್ ಫೆÇೀರ್ಸ್ ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಮಾತನಾಡಿ ಜಿಲ್ಲೆಯಲ್ಲಿ 5 ತಾಲ್ಲೂಕಿನ 36 ಪಂಚಾಯಿತಿ ವ್ಯಾತಿಯಲ್ಲಿ 175 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದೆ. ಇಲ್ಲಿಯವರೆಗೆ 21 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಎಲ್ಲಾ ತಾಲ್ಲೂಕುಗಳಲ್ಲಿ ಟ್ಯಾಂಕರ್ ಸರಬರಾಜು ಮಾಡಲು ದರಪಟ್ಟಿ ನಿಗದಿಗೆ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿರುತ್ತದೆ.
ಜಿಲ್ಲೆಯಲ್ಲಿ ಮುಂದಿನ 37 ವಾರಗಳಿಗಾಗುವಷ್ಟು ಮೇವು ಲಭ್ಯವಿದೆ. ಮುಂದಿನ ದಿನಗಳಲ್ಲಿ ಬರಗಾಲದಿಂದ ಮೇವಿನ ಕೊರತೆಯಾಗಬಾರದೆಂದು ಮೇವಿನ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಮೇವು ಕೊರತೆಯಾದಾಗ ನೆರವಿಗೆ ಮೇವಿನ ಬ್ಯಾಂಕ್ ತೆರೆಯಲು ಸ್ಥಳ ಗುರುತಿಸಲಾಗಿದೆ.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ರೂ.16.78 ಕೋಟಿ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರ ಪಿ.ಡಿ.ಖಾತೆಯಲ್ಲಿ ರೂ.2.67 ಕೋಟಿ ಅನುದಾನ ಲಭ್ಯವಿರುತ್ತದೆ.
ಬರಪರಿಹಾರದ ಕಂಟ್ರೋಲ್ ರೂಂಗಳು 24*7 ಕೆಲಸ ನಿರ್ವಹಿಸಲು ಸಹಾಯವಾಣಿ ಎಲ್ಲಾ ತಾಲ್ಲೂಕುಗಳಲ್ಲಿ ಸ್ಥಾಪಿಸಲು ಸೂಚಿಸಿ ಈಗಾಗಲೇ ಜಿಲ್ಲಾ ಪಂಚಾಯತ್ನಿಂದ 08192-226655 ಸಹಾಯವಾಣಿ ಸ್ಥಾಪಿಸಿ ದಿನದ ಮೂರು ಪಾಳಿಯಲ್ಲಿ ಕೆಲಸ ಮಾಡಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ವಿಡಿಯೋ ಸಂವಾದದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಬಾನು.ಎಸ್.ಬಳ್ಳಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.