ದಾವಣಗೆರೆ: ರಾಜಕೀಯ ನಾಯಕನಂತೆ ಫೋಸ್ ಕೊಟ್ಟು, ಜನರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗ ಯುವಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಆಕಾಂಕ್ಷಿಗಳೇ ಟಾರ್ಗೆಟ್
ಚಿತ್ರದುರ್ಗ ಮೂಲದ ಶ್ರೀನಾಥ್, ತಾನನ್ನು ತಾನು ರಾಜಕಾರಣಿಯಂತೆ ಬಿಂಬಿಸಿಕೊಂಡು ಹಲವು ವರ್ಷಗಳಿಂದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ವಂಚನೆ ಮಾಡುತ್ತಿದ್ದನು. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ ದರ್ಜೆ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ, ಪ್ರತಿ ವ್ಯಕ್ತಿಯಿಂದ ಮೂರರಿಂದ ನಾಲ್ಕು ಲಕ್ಷ ರೂಪಾಯಿಗಳನ್ನು ಪಡೆದಿದ್ದಾನೆ ವಂಚನೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ಅಟೆಂಡರ್ ಪೋಸ್ಟ್ ಗೆ ಮೂರುವರೆ ಲಕ್ಷ ಪಡೆದು ವಂಚನೆ
ನಾಗರಾಜ್ ಎಂಬುವವರು ತಮ್ಮ ಮಗನಿಗೆ ಅಟೆಂಡರ್ ಹುದ್ದೆ ಕೊಡಿಸಲು ಮೂರುವರೆ ಲಕ್ಷ ರೂಪಾಯಿ ನೀಡಿದ್ದು, ಶ್ರೀನಾಥ್ ನಕಲಿ ನೇಮಕಾತಿ ಪತ್ರ ಮತ್ತು ಸರ್ಕಾರಿ ಸೀಲ್ಗಳನ್ನು ಬಳಸಿ ವಂಚಿಸಿದ್ದನು. ಈ ಬಗ್ಗೆ ತಿಳಿಯಲು ನಾಗರಾಜ್ ಖುದ್ದು ಬೆಂಗಳೂರಿನ ಜಲಸಂಪನ್ಮೂಲ ಕಚೇರಿಗೆ ತೆರಳಿದಾಗ ಮೋಸ ಹೋಗಿರುವುದು ಗೊತ್ತಾಗಿದೆ.
ನಂತರ ನಾಗರಾಜ್ ಹಾಗೂ ಇತರ ಸಂತ್ರಸ್ತರು ಶ್ರೀನಾಥ್ನನ್ನು ಹಿಡಿದು ದಾವಣಗೆರೆ ಕೆಟಿಜೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಆರೋಪಿಯು ಇದೇ ರೀತಿ ಹಲವು ಜನರಿಗೆ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ.



