ದಾವಣಗೆರೆ: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆ ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಬಂದು ಹೋಗಿದ್ದು, ಒಟ್ಟು 17 ಸಾವಿರ ಕೋಟಿಯಷ್ಟು ಬೆಳೆ ಹಾನಿಯಾಗಿದೆ. ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರಕ್ಕಾಗಿ ಕೇಂದ್ರದ ಕೃಷಿ ಮಂತ್ರಿಗಳನ್ನು ಭೇಟಿಯಾಗುತ್ತೇನೆ. ಕೇಂದ್ರಕ್ಕೆ ಈಗಾಗಲೇ ನಾಲ್ಕು ಬಾರಿ ಬರ ಪರಿಹಾರ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ಕೇಂದ್ರದಿಂದ ಬರ ಪರಿಹಾರದ ಹಣ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದ್ದು ಯಾವುದೇ ಗೊಂದಲ ಇಲ್ಲ. ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಪ್ರತಿಪಕ್ಷದ ನಾಯಕರಿಲ್ಲ. ಈ ವಿಷಯ ಮರೆಮಾಚಲು ಬಿಜೆಪಿಯವರು ದಿನಕ್ಕೊಂದು ಸುದ್ದಿ ಹರಡಿಸುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರ ಜೀವನಕ್ಕೆ ಸಹಕಾರಿ ಆಗಿವೆ.ಹೊಸ ಸರ್ಕಾರ ಬಂದು ಆರು ತಿಂಗಳಾದರೂ ಬಿಜೆಪಿಯ ಅಧ್ಯಕ್ಷರು ಯಾರು, ಪ್ರತಿಪಕ್ಷದ ನಾಯಕ ಯಾರು ಎಂಬುದು ಗೊತ್ತಿಲ್ಲ. ಅಂತಹವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದರು.



