ದಾವಣಗೆರೆ: ಕನ್ನಡ ಭಾಷೆ ಶೇ. 60ರಷ್ಟು ನಾಮಫಲಕ ಪ್ರದರ್ಶನ; ಮಾ.13ರಿಂದ ಕಡ್ಡಾಯ ಅನುಷ್ಠಾನ- ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಭಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು ಇದರ ಅನುಷ್ಠಾನ ಮಾರ್ಚ್ 13 ರಿಂದ ಜಾರಿಗೆ ಬರಲಿದೆ. ಆದರೆ ಸ್ವಯಂಪ್ರೇರಿತವಾಗಿ ಕನ್ನಡ ಭಾಷೆ ಪ್ರದರ್ಶನಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ 2022 ಮತ್ತು ತಿದ್ದುಪಡಿ ವಿಧೇಯಕ-2024 ರನ್ವಯ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿನ ಎಲ್ಲಾ ಉದ್ದಿಮೆಗಳು, ಕಾರ್ಖಾನೆಗಳು, ಬ್ಯಾಂಕ್‍ಗಳು, ಸಂಘ, ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಶಾಲಾ, ಕಾಲೇಜುಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯ ಪ್ರದರ್ಶನ ಇರಲೇಬೇಕಾಗುತ್ತದೆ. ಕನ್ನಡವನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿದ್ದಲ್ಲಿ 5 ಸಾವಿರದಿಂದ 10 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ. ರಾಜ್ಯದ ಆಡಳಿತ ಭಾಷೆ ಕನ್ನಡವಾಗಿರುವುದರಿಂದ ಎಲ್ಲರೂ ಸ್ವಯಂ ಪ್ರೇರಿತವಾಗಿ ಕನ್ನಡ ಬಳಕೆ ಮಾಡಬೇಕು. ಒಂದು ವೇಳೆ ಸಂಪೂರ್ಣವಾಗಿ ಕನ್ನಡ ಬಳಕೆ ಮಾಡುವುದಾದರೇ ಯಾವುದೇ ಅಭ್ಯಂತರ ಇರುವುದಿಲ್ಲ. ಬ್ಯಾಂಕ್, ಉದ್ದಿಮೆಗಳು ತ್ರಿಭಾಷಾ ಸೂತ್ರ ಪಾಲನೆ ಮಾಡುತ್ತಿದ್ದಲ್ಲಿ ಮೊದಲ ಸಾಲಿನಲ್ಲಿ ಕನ್ನಡ ಭಾಷೆ ಇರಬೇಕು ಎಂದರು.
ಜಿಲ್ಲೆಯ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆದ 12846 ಜನರು ಇದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಮಾಡಲಾಗಿದ್ದು ಶೇ 50 ಕ್ಕಿಂತಲೂ ಹೆಚ್ಚಿದೆ. ಇದನ್ನು ಶೇ 100 ರಷ್ಟು ಎಲ್ಲಾ ಉದ್ದಿಮೆಗಳು, ಸಂಸ್ಥೆಗಳಲ್ಲಿ ಅನುಷ್ಠಾನ ಮಾಡಲು ಕಾರ್ಯಪಡೆಯನ್ನು ರಚಿಸಲಾಗಿದೆ. ಕಾನೂನು ಅನುಷ್ಠಾನಕ್ಕೂ ಮೊದಲು ಸ್ವಯಂ ಪ್ರೇರಿತವಾಗಿ ಅಳವಡಿಸಿಕೊಳ್ಳಲು ಮಾರ್ಚ್ 13 ರ ವರೆಗೆ ಅವಕಾಶ ನೀಡಲಾಗಿದ್ದು ನಂತರದಲ್ಲಿ ಅನುಷ್ಠಾನ ಮಾಡದ ಉದ್ದಿಮೆದಾರರು, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವ ಮೂಲಕ ಕಡ್ಡಾಯವಾಗಿ ಅನುಷ್ಠಾನ ಮಾಡಲು ಆಯಾ ವಿಭಾಗದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ಗ್ರಾಮೀಣ ಭಾಗದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಉದ್ದಿಮೆ, ಸಂಘ, ಸಂಸ್ಥೆಗಳಲ್ಲಿ ನಾಮಫಲಕದಲ್ಲಿ ಕನ್ನಡ ಭಾಷೆಯ ಶೇ 60 ರಷ್ಟು ಪ್ರದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕರಾದ ಮಹಂತೇಶ್ ಮಾತನಾಡಿ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಪರವಾನಗಿ ಪಡೆದವರಿಗೆ ಸೂಚನಾ ಪತ್ರ ನೀಡುವ ಮೂಲಕ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಭಾಷೆಯ ಪ್ರದರ್ಶನ ಮಾಡುವಂತೆ ತಿಳಿಸಲಾಗಿದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಇದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಪಾಲಿಕೆ ಆಯುಕ್ತರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಇಲಾಖೆ ಅಧಿಕಾರಿಗಳು ಸದಸ್ಯರಿರುವರು.

ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಿತಿ ಇದ್ದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು ಸದಸ್ಯರಿದ್ದು ತಹಶೀಲ್ದಾರರು ಸದಸ್ಯ ಕಾರ್ಯದರ್ಶಿಯಾಗಿರುವರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ವಾಮದೇವಪ್ಪ, ಕನ್ನಡ ಪರ ಸಂಘಟನೆಯ ರಾಮೇಗೌಡ, ಶಿವಣ್ಣ, ನಾಗೇಂದ್ರ ಬಂಡೇಕರ್, ಸುಧಾಕರ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *