ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಕ್ಕೆ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮೇಯರ್ ಮತ್ತು ಆಯುಕ್ತರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಪಾಲಿಕೆಯಲ್ಲಿ ನೂತನ ಮೇಯರ್ ಕೆ.ಚಮನ್ ಸಾಬ್ ಅವರ ಕಚೇರಿ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಪಾಲಿಕೆಯಲ್ಲಿ ಇ-ಸ್ವತ್ತು ಸೇರಿ ವಿವಿಧ ಕೆಲಸ, ಕಾರ್ಯ ಮಾಡಿಕೊಡಲು ಅಧಿಕಾರಿ, ಸಿಬ್ಬಂದಿಗಳು ಅಲೆದಾಡಿಸುತ್ತಿದ್ದಾರೆ ಎಂದು ದೂರುಗಳಿವೆ. ಈ ಧೋರಣೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮೇಯರ್, ಆಯುಕ್ತರು ಗಮನ ಹರಿಸಬೇಕು ಎಂದರು.
ಪಾಲಿಕೆಯಲ್ಲಿ ಒಂದೇ ವಿಭಾಗದಲ್ಲಿ, ಒಂದೇ ಕಡೆ ಬಹಳ ದಿನಗಳಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಯನ್ನು ತಕ್ಷಣ ಬದಲಾವಣೆ ಮಾಡಬೇಕು.ಯಾವುದೇ ಅಧಿಕಾರಿ, ಸಿಬ್ಬಂದಿ ಬಗ್ಗೆ ಪಾಲಿಕೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಅಂತಹವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು. ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದನ್ನು ತಪ್ಪಿಸಬೇಕು. ತ್ವರಿತವಾಗಿ ಜನರ ಕೆಲಸ, ಕಾರ್ಯಗಳು ಪಾಲಿಕೆಯಲ್ಲಿ ಆಗಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮೇಯರ್ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಉಪ ಮೇಯರ್ ಶಾಂತಕುಮಾರ ಸೋಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಮಾಜಿ ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ ಗಡಿಗುಡಾಳ, ಎ.ನಾಗರಾಜ, ನಾಗರಾಜ, ಸವಿತಾ ಹುಲ್ಮನಿ ಗಣೇಶ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್, ಪಾಲಿಕೆ ಅಧಿಕಾರಿ, ಸಿಬ್ಬಂದಿಗಳು ಇದ್ದರು.



