ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ; ಸಮರ್ಥ್‌ ಶಾಮನೂರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವ ಮೂಲಕ ಅವುಗಳನ್ನು ಮಾದರಿ ಶಿಕ್ಷಣ ಕೇಂದ್ರಗಳನ್ನಾಗಿ ಪರಿವರ್ತಿಸಲು ಬದ್ಧವಾಗಿದ್ದು, ಗ್ರಾಮೀಣ ಮಕ್ಕಳ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಮಲ್ಲಿಕಾರ್ಜುನ್‌ ಶಾಮನೂರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಹಮ್ಮಿಕೊಂಡಿದ್ದ, 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರು ಹಾಗೂ ಶಿಕ್ಷಕರ ಮಹಾಸಭಾ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು.

ಮೂರು ತಿಂಗಳ ಹಿಂದೆ ಬಸಾಪುರ ಗ್ರಾಮಕ್ಕೆ ಭೇಟಿ ನೀಡಿ, ಶಾಲೆಯ ನೂತನ ಕಾಂಪೌಂಡ್ ಹಾಗೂ ಎರಡು ನೂತನ ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಲಾಗಿತ್ತು. ಈ ಯಶಸ್ವಿ ಯೋಜನೆಯ ಬೆನ್ನಲ್ಲೇ, ಸಾರ್ವಜನಿಕರ ಬೇಡಿಕೆಯಂತೆ ಇದೀಗ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುನ್ನಡೆಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಮಂಡಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖಂಡರು, ಮುಂಬರುವ ದಿನಗಳಲ್ಲಿ ಶಾಲೆಗೆ ಅಗತ್ಯವಿರುವ ಇನ್ನೂ ಎರಡು ಹೆಚ್ಚುವರಿ ತರಗತಿ ಕೊಠಡಿಗಳನ್ನು ಮಂಜೂರು ಮಾಡಲಾಗುವುದು ಎಂದರು. ಇದರೊಂದಿಗೆ ಸಣ್ಣ ಮಕ್ಕಳ ದೈಹಿಕ ವಿಕಾಸಕ್ಕಾಗಿ ಶಾಲಾ ಆವರಣದಲ್ಲಿ ಸುಸಜ್ಜಿತವಾದ ಆಟದ ಮೈದಾನ ನಿರ್ಮಿಸಿಕೊಡುವುದಾಗಿ ಹಾಗೂ ಬಸಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಶೀಘ್ರದಲ್ಲೇ ದುರಸ್ತಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಶಾಲೆಗೆ ಅಗತ್ಯವಿರುವ ಮೂಲಸೌಕರ್ಯಗಳು, ಕಟ್ಟಡ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮಸ್ಥರು ಸಹ ಇದಕ್ಕೆ ಕೈಜೋಡಿಸುತ್ತಿರುವುದು ಶ್ಲಾಘನೀಯ. ಆದರೆ, ಈ ವೇಳೆ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಶಾಲೆಯಲ್ಲಿ ಶ್ರದ್ಧೆಯಿಂದ ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್‌ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಪೋಷಕರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅವಲೋಕಿಸಿದಾಗ, ಅಲ್ಲಿ ಕಲಿಯುವ ಮಕ್ಕಳಿಗೆ ಹೆಚ್ಚಿನ ಉತ್ತೇಜನ, ಪ್ರೋತ್ಸಾಹ ಹಾಗೂ ಉತ್ಸಾಹ ತುಂಬುವಂತಹ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚಾಗಿದೆ, ಖಾಸಗಿ ಶಾಲೆಗಳ ದುಬಾರಿ ಶುಲ್ಕಕ್ಕಾಗಿ ಪೋಷಕರು ಸಾಲದ ಸುಳಿಗೆ ಸಿಲುಕುವುದನ್ನು ತಪ್ಪಿಸಲು ಸರ್ಕಾರಿ ಶಾಲೆಗಳು ಉತ್ತಮಪಡಿಸುವುದು ಇದಕ್ಕೆ ಪರ್ಯಾಯವಾಗಿವೆ. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳು ಕೇವಲ ಉಚಿತವಲ್ಲ, ಅವು ಮಕ್ಕಳ ಹಕ್ಕುಗಳಾಗಿ̧ವೆ̧ ಬೆಳಗಿನ ರಾಗಿಮಾಲ್ಟ್, ಹಾಲು ಮತ್ತು ಮಧ್ಯಾಹ್ನದ ಬಿಸಿಯೂಟ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆ. ಉಚಿತ ಪಠ್ಯಪುಸ್ತಕಗಳು, ನೋಟ್‌ಬುಕ್‌ಗಳು, ಯೂನಿಫಾರ್ಮ್ ಮತ್ತು ಶೂ-ಸಾಕ್ಸ್ ಒದಗಿಸುವ ಮೂಲಕ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಸಂಪೂರ್ಣವಾಗಿ ತಗ್ಗಿಸಲಾಗಿದೆ. ಸಾಧನೆಗೆ ಶಾಲೆ ಮುಖ್ಯವಲ್ಲ, ಶ್ರಮ ಮುಖ್ಯ ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಸ್ಥಾನಕ್ಕೇರಲು ಸಾಧ್ಯವಿಲ್ಲ ಎಂಬುದು ಕೇವಲ ಭ್ರಮೆ ಎಂದರು.

ದೇಶದ ಅತ್ಯುನ್ನತ ಸೇವೆಗಳಾದ ಐ.ಎ.ಎಸ್., ಐ.ಪಿ.ಎಸ್‌ , ಕಂದಾಯ ಸೇವೆಗಳು, ನಾಸಾ ಮತ್ತು ಇಸ್ರೋದಂತಹ ಸಂಸ್ಥೆಗಳಲ್ಲಿರುವ ವಿಜ್ಞಾನಿಗಳು, ಪ್ರಖ್ಯಾತ ವೈದ್ಯರು ಮತ್ತು ಇಂಜಿನಿಯರ್‌ಗಳು ಸರ್ಕಾರಿ ಶಾಲೆಗಳಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿದವರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಪರಿಣಿತ, ತರಬೇತಿ ಪಡೆದ ಮತ್ತು ಅರ್ಹತೆಯುಳ್ಳ ಶಿಕ್ಷಕರಿರುತ್ತಾರೆ, ಇದು ಗುಣಮಟ್ಟದ ಶಿಕ್ಷಣಕ್ಕೆ ದೊಡ್ಡ ಬುನಾದಿಯಾಗಿದೆ ಎಂದು ತಿಳಿಸಿದರು.

ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು. ಈ ನಿಟ್ಟಿನಲ್ಲಿ ವೈವಿಧ್ಯಮಯ ಚಟುವಟಿಕೆಗಳ ಮೂಲಕ ನಿರಂತರ ಕಲಿಕೆಯನ್ನು ಜೀವಂತವಾಗಿಡಲು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಕಲೆ, ಕ್ರೀಡೆ, ವಿಜ್ಞಾನ ಪ್ರದರ್ಶನಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸರ್ಕಾರಿ ಶಾಲೆಯ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಬಹುದು. ಇದು ಮಕ್ಕಳಲ್ಲಿ ಕೀಳರಿಮೆಯನ್ನು ಹೋಗಲಾಡಿಸಿ, ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ತುಂಬುತ್ತದೆ, ಖಾಸಗಿ ಮತ್ತು ಸರ್ಕಾರಿ ಶಾಲೆಗಳ ನಡುವಿನ ತಾರತಮ್ಯದ ಭಾವನೆ ಮೊದಲು ಪೋಷಕರ ಮನಸ್ಸಿನಿಂದ ದೂರಾಗಬೇಕು. ಸರ್ಕಾರಿ ಶಾಲೆಗಳು ಬಡವರ ಶಾಲೆಗಳಲ್ಲ, ಅವು ನಮ್ಮ ಹಕ್ಕು ಮತ್ತು ಗುಣಮಟ್ಟದ ಶಿಕ್ಷಣದ ಕೇಂದ್ರಗಳು ಎಂಬ ಭಾವನೆ ಸಮಾಜದಲ್ಲಿ ಮೂಡಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ, ಎಸ್.ಎಸ್.ಎಲ್‌.ಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ಬಸಾಪುರ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಮತ್ತು ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿಯ ಟೇಪ್‌ ಕತ್ತರಿಸಿ 2026-27 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರಾರಂಭೋತ್ಸವನ್ನು ಮಾಡಿದರು. ಎಲ್.ಕೆ.ಜಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಿದರು.

ಡಿಡಿಪಿಐ ಕೃಷ್ಣ ಪ್ರಸಾದ, ಡಯಟ್‌ ಪ್ರಾಂಶುಪಾಲುರಾದ ಗೀತಾ , ಬಿಇಒ ವಿಶಾಲಾಕ್ಷಿ, ಬಸಾಪುರ ಗ್ರಾಮದ ಶಾಲೆಗಳ ಶಿಕ್ಷಕರುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *