ದಾವಣಗೆರೆ: ತುಂಗಭದ್ರಾ ನದಿ ಮಾಲಿನ್ಯ ತಡೆಗೆ ಕ್ರಮ; ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ತುಂಗಭದ್ರಾ ನದಿಯ ನೀರು ಕಲುಷಿತಗೊಳ್ಳುತ್ತಿರುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 6ನೇ ಜಿಲ್ಲಾ ಮಟ್ಟದ ವಿಶೇಷ ಪರಿಸರ ಉಸ್ತುವಾರಿ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಜಲಶಕ್ತಿ ಸಚಿವಾಲಯವು ಏಪ್ರಿಲ್‌ 04 ರಂದು ನಡೆಸಿದ 21ನೇ ಕೇಂದ್ರ ಉಸ್ತುವಾರಿ ಸಮಿತಿ ಸಭೆಯಲ್ಲಿ, ತುಂಗಭದ್ರಾ ನದಿಯ ನೀರಿನ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಇದನ್ನು ‘ಆದ್ಯತೆ-1’ ವ್ಯಾಪ್ತಿಗೆ ಸೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯ ಪುನಶ್ಚೇತನಕ್ಕಾಗಿ ತುರ್ತು ಕ್ರಿಯಾ ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ತಿಳಿಸಿದರು.

ಹೊನ್ನಾಳಿಯಿಂದ ಹರಳಹಳ್ಳಿ ಬ್ರಿಡ್ಜ್‌ ವರೆಗಿನ ಸುಮಾರು 90 ಕಿಲೋಮೀಟರ್ ವ್ಯಾಪ್ತಿಯ ತುಂಗಭದ್ರಾ ನದಿ ತೀರವು ಮಾಲಿನ್ಯ ಭಾದಿತ ಪ್ರದೇಶವೆಂದು ಗುರುತಿಸಲ್ಪಟ್ಟಿದೆ. ಈ ಭಾಗದಲ್ಲಿ ನದಿ ನೀರಿಗೆ ರಾಸಾಯನಿಕ ಅಂಶಗಳು, ಚರಂಡಿ ನೀರು ಮತ್ತು ಕೈಗಾರಿಕಾ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ಕಾರ್ಯಯೋಜನೆ ರೂಪಿಸಬೇಕು ಮತ್ತು ಸಮಗ್ರ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿಯಲ್ಲಿ ಜೈವಿಕ ಆಮ್ಲಜನಕದ ಅಗತ್ಯತೆ ಮಟ್ಟವು ಪ್ರಸ್ತುತ 3.5 mg/L ಗೆ ಇಳಿಕೆಯಾಗಿದ್ದು, ನೀರಿನ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ, ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು ಹೊನ್ನಾಳಿ, ಮಲೇಬೆನ್ನೂರು ಹಾಗೂ ಹರಿಹರ ಭಾಗಗಳಲ್ಲಿ ಕೈಗೊಳ್ಳಲಾಗಿರುವ ತ್ಯಾಜ್ಯ ನೀರು ಸಂಸ್ಕರಣಾ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಹೊನ್ನಾಳಿ, ಮಲೆಬೆನ್ನೂರು ಮತ್ತು ಹರಿಹರ ಪ್ರದೇಶಗಳಲ್ಲಿನ ಹಳೆಯ ಟ್ರೀಟ್‌ಮೆಂಟ್ ಪ್ಲಾಂಟ್‌ಗಳನ್ನು ಎಸ್‌ಬಿಆರ್ ತಂತ್ರಜ್ಞಾನಕ್ಕೆ ಮೇಲ್ದರ್ಜೆಗೇರಿಸಲು ಅಗತ್ಯ ಅನುಮೋದನೆ ಪಡೆದು, ಕಾಮಗಾರಿ ತ್ವರಿತಗೊಳಿಸಲು ಸೂಚನೆ ನೀಡಿದರು.

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಗೃಹಬಳಕೆಯ ಬೂದು ನೀರು ನದಿಗೆ ಸೇರದಂತೆ ಹಿಂಗೂಡು ಗುಂಡಿಗಳನ್ನು ಕಡ್ಡಾಯವಾಗಿ ಬಳಸಲು ಮತ್ತು ಚರಂಡಿ ನೀರಿನ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಲು ತಿಳಿಸಿದರು.

ಜಿಲ್ಲೆಯ ಹಲವು ಭಾಗಗಳಲ್ಲಿ ಅಧಿಕೃತ ಸ್ಮಶಾನಗಳಿಲ್ಲದೆ, ಸಾರ್ವಜನಿಕರು ನದಿ ದಂಡೆ ಬಳಿ ಶವಸಂಸ್ಕಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಪರಿಸರ ಕಲಿಷಿತಗೊಳ್ಳುವುದನ್ನು ತಡೆಯಲು, ತಕ್ಷಣವೇ ಸೂಕ್ತ ಸರ್ಕಾರಿ ಜಮೀನನ್ನು ಗುರುತಿಸಿ ಅಧಿಕೃತ ಸ್ಮಶಾನಗಳನ್ನು ನಿರ್ಮಿಸಲು ತಹಶೀಲ್ದಾರ್ ಮತ್ತು ಸ್ಥಳೀಯ ಸಂಸ್ಥೆಗಳು ವರದಿ ನೀಡುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.

ನೀರು ಮರುಬಳಕೆ

ನದಿ ಹಾಗೂ ಜಲಮೂಲಗಳಿಗೆ ಕಲುಷಿತ ನೀರು ಸೇರುವುದನ್ನು ಸಂಪೂರ್ಣವಾಗಿ ತಡೆಯಲು ಸಂಸ್ಕರಣಾ ಘಟಕಗಳಿಂದ ಬರುವ ಶುದ್ಧೀಕರಿಸಿದ ನೀರನ್ನು ಮರುಬಳಕೆ ಮಾಡಬೇಕು, ಈ ಸಂಸ್ಕರಿಸಿದ ನೀರನ್ನು ಕೃಷಿ ಚಟುವಟಿಕೆಗಳು, ಕೈಗಾರಿಕೆಗಳು ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡಲಾಗುವುದು , ರೈತರು ಹಾಗೂ ಉದ್ಯಮಿಗಳು ಸ್ವಂತ ವೆಚ್ಚದಲ್ಲಿ ಪೈಪ್‌ಲೈನ್ ಅಳವಡಿಸಿಕೊಂಡು ಈ ನೀರನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.

ಯುಜಿಡಿ ಸಂಪರ್ಕ ಕಡ್ಡಾಯ

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಯುಜಿಡಿ (ಒಳಚರಂಡಿ) ಮಾರ್ಗಕ್ಕೆ ಸಂಪರ್ಕ ಕಲ್ಪಿಸದೆ, ತ್ಯಾಜ್ಯ ನೀರನ್ನು ನೇರವಾಗಿ ರಾಜಕಾಲುವೆ ಅಥವಾ ನದಿಗೆ ಹರಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಗರದ ಕಲ್ಯಾಣ ಮಂಟಪಗಳು, ಮಠಗಳು, ಛತ್ರಗಳು, ಸಮುದಾಯ ಭವನಗಳು, ಹಾಸ್ಟೆಲ್ ಹಾಗೂ ಶಾಲೆಗಳು ಕಡ್ಡಾಯವಾಗಿ ಯುಜಿಡಿ ಸಂಪರ್ಕ ಪಡೆದಿರಬೇಕು ಎಂದು ತಿಳಿಸಿದರು.

ಕೃಷಿಯಲ್ಲಿ ವಿಪರೀತ ರಾಸಾಯನಿಕ ಗೊಬ್ಬರಗಳು (ಯುರಿಯಾ, ಡಿಎಪಿ) ಬಳಕೆಯಾಗುತ್ತಿರುವುದರಿಂದ ನದಿಯ ನೀರು ಮಾಲಿನ್ಯಗೊಳ್ಳುತ್ತಿದ್ದು, ರೈತರಿಗೆ ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ತಿಳಿಸಿದರು.

ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮಾಲಿನ್ಯವಾಗದಂತೆ ತಡೆಯುವುದು ಮತ್ತು ಸಾರ್ವಜನಿಕ ಬಳಕೆಯ ನೀರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಿರಂತರ ಗುಣಮಟ್ಟ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರಂಗೇಗೌಡ , ಜಿಲ್ಲಾ ಪರಿಸರ ಅಧಿಕಾರಿ ಶೈಲಜಾ, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್‌, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್‌ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *