ದಾವಣಗೆರೆ: ಇತ್ತೀಚಿನ ಸಮೀಕ್ಷೆಯ ಪ್ರಕಾರ ದಾವಣಗೆರೆಯಲ್ಲಿ 54 ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಲಾಗಿದ್ದು, ಕಳೆದ ವರ್ಷ 06 ಮತ್ತು ಈ ವರ್ಷ 01 ಪ್ರಕರಣ ದಾಖಲಿಸಲಾಗಿದೆ.
ನಗರದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ ಕುರಿತ ಸಂಚಾರಿ ರಥದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಪ್ರವೀಣ್ ನಾಯಕ್ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರತಿಯೊಂದು ಮಕ್ಕಳಿಗೂ ಬಾಲ್ಯವನ್ನು ಅನುಭವಿಸುವ ಹಕ್ಕಿದೆ ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ಬಹಳಷ್ಟು ಜನರಿಗೆ ಕಾನೂನು ಸೇವಾ ಪ್ರಾಧಿಕಾರದ ಬಗ್ಗೆ ಅರಿವು ಇರುವುದಿಲ್ಲ. ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಷ್ಟ್ರ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೆ ಎಲ್ಲರಿಗೂ ಕಾನೂನಿನ ಅರಿವು ಮೂಡಿಸಲಾಗುತ್ತಿದೆ. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನಾ ಸಂಚಾರ ಜಾಗೃತಿ ಜಾಥಾ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ. ಜಾಗೃತಿ ಜಾಥಾ ಜಿಲ್ಲೆಯಾದ್ಯಂತ ಜ. 14 ರವರೆಗೆ ಸಂಚರಿಸಲಿದ್ದು, ಪ್ರತಿಯೊಬ್ಬರು ಕೂಡ ಈ ಕಾರ್ಯಕ್ರಮಕ್ಕೆ ಕೈಜೋಡಿಸಬೇಕು ಎಂದು ಪ್ರವೀಣ್ ನಾಯಕ್ ಹೇಳಿದರು.
ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯಕ್ತ ಡಿ.ಜಿ ನಾಗೇಶ್ ಮಾತನಾಡಿ, ದೇಶದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಲ್ಲಿ ಜಾರಿಗೆ ಬಂದಿದೆ. 14 ವರ್ಷದೊಳಗಿನ ಮಕ್ಕಳನ್ನು ಬಾಲ ಕಾರ್ಮಿಕರಾಗಿ ಹಾಗೂ 15 ರಿಂದ 18 ವರ್ಷದ ಒಳಗಿನ ಮಕ್ಕಳನ್ನು ಕಿಶೋರ ಕಾರ್ಮಿಕರಾಗಿ ದುಡಿಸಿಕೊಳ್ಳುವ ಮಾಲೀಕರ ಜೊತೆಗೆ, ದುಡಿಯಲು ಕಳುಹಿಸುವ ಪೋಷಕರ ವಿರುದ್ಧವೂ ಕೂಡ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿದೆ. ಕಾನೂನಿನಿಂದಲೇ ಎಲ್ಲವನ್ನು ಬದಲಾಯಿಸಲು ಸಾಧ್ಯವಿಲ್ಲ, ಪ್ರತಿಯೊಬ್ಬರು ಮನ ಪರಿವರ್ತನೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇತ್ತೀಚಿನ ಸಮೀಕ್ಷೆಯ ಪ್ರಕಾರ ದಾವಣಗೆರೆ ಒಂದರಲ್ಲೇ 54 ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಲಾಗಿದ್ದು, ಕಳೆದ ವರ್ಷ 06 ಮತ್ತು ಈ ವರ್ಷ 01 ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಶಪ್ಪ ಜಿ ಆರ್, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಎಸ್.ಆರ್ ವೀಣಾ, ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್, ಪೀಪಲ್ ಸ್ವಯಂ ಸೇವಾ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ ಕುರಿತ ಭಿತ್ತಿ ಪತ್ರವನ್ನು ಗಣ್ಯರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.



