ದಾವಣಗೆರೆ: ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರೆಯು ಜರುಗಲಿದೆ. ಜತೆಗೆ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆಯೂ ನಡೆಯಲಿದೆ. ಈ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಆಗಮಿಸಿಲಿದ್ದು, ದೇವಸ್ಥಾನದ ಅಥವಾ ಜಾತ್ರಾ ಆವರಣದ ಪ್ರದೇಶದೊಳಗೆ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಹಾಗೂ ಮಾರಕಾಸ್ತ್ರ ತರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ಧಾರೆ.
ಸಾರ್ವಜನಿಕ ಹಿತದೃಷ್ಟಿಯಿಂದಾಗಿ, ಪರಿಸರ ನೈರ್ಮಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾ.13 ರಿಂದ ಮಾ.16 ರವರೆಗೆ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು ನಿಷೇಧಿಸುವುದು ಅಗತ್ಯ ಎಂದು ಕಂಡುಬಂದಿರುವ ಹಿನ್ನಲೆಯಲ್ಲಿ ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ಧತಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ.



