ದಾವಣಗೆರೆ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಇಂದು ಹೈಕೋರ್ಟ್ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿರುವ ಹೈಕೋರ್ಟ್, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಬಗ್ಗೆ ಹೈಕೋರ್ಟ್ ತೀರ್ಪಿನ ಪರವಾಗಲಿ, ವಿರೋಧವಾಗಲಿ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಇತರೆಡೆ ಯಾವುದೇ ರೀತಿಯ ಪೋಸ್ಟ್, ಸ್ಟೇಟಸ್ ಅಥವಾ ಪ್ರಛೋದನಕಾರಿ ಹೇಳಿಕೆ , ಮೆರವಣಿಗೆ, ವಿಜಯೋತ್ಸವ ಹಾಗೂ ಪ್ರತಿಭಟನೆ ಮಾಡುವಂತಿಲ್ಲ. ಕಲಂ 144 ಸಿಆರ್ ಪಿಸಿ ನಿಷೇಧ ಹೇರಲಾಗಿದ್ದು, ಗುಂಪುಗಾರಿಕೆ, ಗಲಾಟೆ, ದೊಂಬಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮಾಹಿತಿ ಇದ್ದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಪೊಲೀಸ್ ತಿಳಿಸಿದೆ.
ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ.



