ದಾವಣಗೆರೆ: ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರೂ ಸಹ ಭಾಗವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಕರೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಐ.ಇ.ಸಿ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿಶ್ವ ಮಲೇರಿಯಾ ದಿನ, ಮಲೇರಿಯಾವನ್ನು ನಿಯಂತ್ರಿಸುವ ಮತ್ತು ಅಂತಿಮವಾಗಿ ನಿರ್ಮೂಲನೆ ಮಾಡುವ ಜಾಗತಿಕ ಪ್ರಯತ್ನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷದಂತೆ ಈ ವರ್ಷವು ಸಹ ಏಪ್ರಿಲ್ 25 ರಂದು ವಿಶ್ವ ಮಲೇರಿಯಾ ದಿನಾಚರಣೆಯನ್ನು “ನವೀನ ವಿಧಾನಗಳನ್ನು ಬಳಸೋಣ-ಮಲೇರಿಯಾ ಕಡಿಮೆ ಮಾಡಿ, ಜೀವ ಉಳಿಸೋಣ” ಎಂಬ ಘೋಷಣೆಯೊಂದಿಗೆ ನಡೆಸಲಾಗುತ್ತಿದೆ. ಭಾರತದಲ್ಲಿ 2008 ರಲ್ಲಿ ಮೊದಲ ಬಾರಿಗೆ ವಿಶ್ವ ಮಲೇರಿಯಾ ದಿನವನ್ನು ಆಚರಣೆಯನ್ನು ಪ್ರಾರಂಭಿಸಲಾಯಿತು.
2025ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ಸಾಧಿಸಬೇಕಾಗಿರುವುದರಿಂದ, ಎಲ್ಲ ಹಂತಗಳಲ್ಲೂ ಮಲೇರಿಯಾ ನಿವಾರಣಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ರಕ್ತ ಪರೀಕ್ಷೆ, ಜ್ವರ ಸಮೀಕ್ಷೆ, ಡಿ.ಡಿ.ಟಿ ಸಿಂಪರಣಾ ಕಾರ್ಯ, ಸಮಸ್ಯಾತ್ಮಾಕ ಪ್ರದೇಶಗಳಿಗೆ ಸೊಳ್ಳೆ ಪರದೆ ವಿತರಣೆ, ವಲಸೆ ಜನರ ಜ್ವರ ಸಮೀಕ್ಷೆ, ಸೊಳ್ಳೆ ನಿಯಂತ್ರಣಕ್ಕಾಗಿ ಲಾರ್ವಾಹಾರಿ ಮೀನುಗಳ ಬಿಡುಗಡೆ, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಾರ್ವಾಹಾರಿ ಮೀನುಗಳ ಸಾಕಾಣಿಕ ಕೇಂದ್ರಗಳ ಅಭಿವೃದ್ದಿ, ಕರಪತ್ರ/ಭಿತ್ತಿ ಪತ್ರ/ ಮೈಕಿಂಗ್/ ಸ್ಕ್ರೋಲಿಂಗ್ ಮೂಲಕ ಆರೋಗ್ಯ ಶಿಕ್ಷಣ ಮುಂತಾದ ಸಮರೋಪಾದಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಶ್ರಮವಹಿಸುತ್ತಿದೆ. 2025 ರ ವೇಳೆಗೆ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೈಗೊಳ್ಳುವ ಚಟುವಟಿಕೆಗಳಿಗೆ ಇತರೆ ಇಲಾಖೆಗಳು ಮತ್ತು ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದರು. ಜಿಲ್ಲೆಯ ಕಳೆದ 05 ವರ್ಷದ ಮಲೇರಿಯಾ ಪ್ರಕರಣಗಳ ವಿವರ ಇಂತಿವೆ.2017 ರಲ್ಲಿ 10 ಪ್ರಕರಣ, 2018 ರಲ್ಲಿ 09 ಪ್ರಕರಣ, 2019 ರಲ್ಲಿ 08 ಪ್ರಕರಣ, 2020 ರಲ್ಲಿ 04 ಪ್ರಕರಣ, 2021 ರಲ್ಲಿ 03 ಮಲೇರಿಯಾ ಪ್ರಕರಣ ವರದಿಯಾಗಿದ್ದು, 2025ರ ವೇಳೆಗೆ ಮಲೇರಿಯಾ ನಿವಾರಣಾ ಗುರಿ ಸಾಧಿಸುವ ನಿಟ್ಟಿನಲ್ಲಿ ಗುರಿ ಹೊಂದಿದ್ದೆವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಸಿ.ಬಿ. ರಿಷ್ಯಂತ್, ಉಪವಿಭಾಗಧಿಕಾರಿಗಳಾದ ತಿಮ್ಮಣ್ಣ ಹುಲ್ಲುಮನೆ ಮತ್ತು ಮಮತ ಹೊಸಗೌಡರ, ಜಿಲ್ಲಾ ಯೋಜನಾ ನಿರ್ದೇಶಕರಾದ ಜಿ. ನಜ್ಮ, ಜಿಲ್ಲಾ ಮಲೇರಿಯಾಧಿಕಾರಿಗಳಾದ ಡಾ|| ನಟರಾಜ ಕೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



