ದಾವಣಗೆರೆ: ದಾವಣಗೆರೆ ತಾಲ್ಲೂಕು ವ್ಯಾಪ್ತಿಯ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸಲು ಸರ್ಕಾರಿ ಜಮೀನು ಒತ್ತುವರಿಯಾಗಿರುವ ಬಗ್ಗೆ ಸಾರ್ವಜನಿಕರು ಸರ್ಕಾರಕ್ಕೆ ಮಾಹಿತಿ ನೀಡಬಹುದು ಎಂದು ದಾವಣಗೆರೆ ತಹಶೀಲ್ದಾರ್ ಬಸವನಗೌಡ ಕೊಟ್ಟೂರು ತಿಳಿಸಿದ್ದಾರೆ.
ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು, ಸ್ಮಶಾನ ಕಲ್ಪಿಸಲು ನಿಯಮಗಳಂತೆ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ 02 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿರುತ್ತದೆ. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 71 ರಡಿ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾಧಿಕಾರಿಗಳು ರಾಜ್ಯದಲ್ಲಿ ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು 1966 ರ ನಿಯಮ 97(4)ರಲ್ಲಿ ಜಿಲ್ಲಾಧಿಕಾರಿಯವರಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು ‘ಬ’ ಖರಾಬು ಎಂದು ವರ್ಗಿಕೃತವಾಗಿದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿದೆ.
ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 71 ರನ್ವಯ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಲಾಗುವುದು.
ಈ ಎಲ್ಲಾ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್ಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಗೋಕಟ್ಟೆ, ಹಳ್ಳ, ಸರೋವರ, ಮತ್ತು ಇನ್ನಿತರೆ ಜಲಕಾಯ/ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲ ಬಗೆಯ ಸರ್ಕಾರಿ ಜಮೀನುಗಳು ಒಂದು ವೇಳೆ ಒತ್ತುವರಿಯಾಗಿದ್ದಲ್ಲಿ, ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್ಗೆ ದೂರು ನೀಡಬಹುದು ಎಂದು ತಹಸಿಲ್ದಾರ್ ಬಸವನಗೌಡ ಕೊಟ್ಟೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



