ದಾವಣಗೆರೆ: ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ದಾವಣಗೆರೆಯ ಕೆ.ರಾಘವೇಂದ್ರ ನಾಯರಿ ಅವರು ಪುನರಾಯ್ಕೆಯಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರಾದ ಬಿ.ಆನಂದಮೂರ್ತಿ ತಿಳಿಸಿದ್ದಾರೆ.
ಜು. 03 ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ನ 26 ನೇ ಸಮ್ಮೇಳನದಲ್ಲಿ ನಾಯರಿಯವರು ಜಂಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಡರೇಷನ್ನ ಅಧ್ಯಕ್ಷರಾಗಿ ಕೆನರಾ ಬ್ಯಾಂಕಿನ ಎಂ.ಎಸ್.ಶ್ರೀನಿವಾಸನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಜಯನಾಥ್ ಅವರು ಆಯ್ಕೆಯಾಗಿದ್ದಾರೆ.
ಸಮ್ಮೇಳನದಲ್ಲಿ ದಾವಣಗೆರೆ ಜಿಲ್ಲೆಯಿಂದ ಬಿ.ಆನಂದಮೂರ್ತಿ, ಕೆ.ರಾಘವೇಂದ್ರ ನಾಯರಿ, ಹೆಚ್.ಎಸ್.ತಿಪ್ಪೇಸ್ವಾಮಿ, ಕೆ.ವಿಶ್ವನಾಥ್ ಬಿಲ್ಲವ, ಆರ್.ಆಂಜನೇಯ, ಪರಶುರಾಮ್, ಕೆ.ಶಶಿಶೇಖರ್ ಅವರುಗಳು ಪ್ರತಿನಿಧಿಗಳಾಗಿ ಭಾಗವಹಿಸಿದ್ದರು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) ರಾಜ್ಯ ಸಮಿತಿಯಾದ ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಒಕ್ಕೂಟವು (KPBEF) ರಾಜ್ಯದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳಲ್ಲಿರುವ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) ಸಂಯೋಜಿತ ಸಂಘಗಳ ಒಕ್ಕೂಟವಾಗಿದೆ. ಕೆ.ರಾಘವೇಂದ್ರ ನಾಯರಿಯವರು ಪ್ರಸ್ತುತ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ಹಾಗೂ ಅಸಂಘಟಿತ ಕಾರ್ಮಿಕ ವಲಯದ ಮುಖಂಡರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



